ADVERTISEMENT

ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ದೇವರಾಜೇಗೌಡ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2023, 14:44 IST
Last Updated 23 ನವೆಂಬರ್ 2023, 14:44 IST

ಹಾಸನ: ಜೆಡಿಎಸ್ ನಾಯಕರ ಕುಮ್ಮಕ್ಕಿನಿಂದ ಹೊಳೆನರಸೀಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಕೆಲ ಅಧಿಕಾರಿಗಳು ತೊಂದರೆ ನೀಡುತ್ತಿದ್ದು, ಇದೇ ರೀತಿ ಮುಂದುವರಿದರೆ ಕಾನೂನಿನ ವ್ಯಾಪ್ತಿಯಲ್ಲಿ ಉತ್ತರ ನೀಡಲಾಗುವುದು ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ನಂತರವೂ ಹೊಳೆನರಸೀಪುರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡಲಾಗುತ್ತಿದೆ‌. ಇಂತಹ ಬೆಳವಣಿಗೆ ಇರುವಾಗ ಮೈತ್ರಿಯ ಲಾಭವಾದರೂ ಏನು ಎಂದು ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅನರ್ಹತೆ ಕುರಿತು ಸುಪ್ರೀಂ ಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಅಷ್ಟೇ. ಅಂತಿಮ ತೀರ್ಪು ಬಾಕಿ ಇದೆ ಎಂದು ತಿಳಿಸಿದ ಅವರು, ಇಷ್ಟು ದಿನ ಸುಮ್ಮನಿದ್ದ ಸಂಸದ ಪ್ರಜ್ವಲ್ ರೇವಣ್ಣ ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ ಸಭೆಗಳನ್ನು ನಡೆಸುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯ, ಗೂಂಡಾಗಿರಿ ಹಾಗೂ ಪೊಲೀಸ್ ಇಲಾಖೆ ಮೂಲಕ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ADVERTISEMENT

ನಾನು ದೆಹಲಿ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಉದಾಹರಣೆ ಸಾಕಷ್ಟಿವೆ. ವಿಶೇಷವಾಗಿ ಇಲ್ಲಿನ ಪೊಲೀಸರು ನಮ್ಮ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿದ್ದು, ಇದಕ್ಕೆ ಕಾನೂನಿನಡಿ ಉತ್ತರ ನೀಡಲಾಗುವುದು ಎಂದು ತಿಳಿಸಿದರು.

ಬಿಜೆಪಿ– ಜೆಡಿಎಸ್ ಮೈತ್ರಿಗೂ ಹಾಗೂ ಜೆಡಿಎಸ್ ನಾಯಕರ ವಿರುದ್ಧದ ನನ್ನ ಕಾನೂನು ಹೋರಾಟಕ್ಕೂ ಸಂಬಂಧವಿಲ್ಲ ಈ ಪ್ರಕರಣ ಸಂಬಂಧ ಕೇಂದ್ರದ ಯಾವುದೇ ನಾಯಕರು ನನ್ನೊಂದಿಗೆ ಮಾತುಕತೆ ನಡೆಸಿಲ್ಲ. ಈ ಬಗ್ಗೆ ಹರಡುತ್ತಿರುವ ಊಹಾಪೋಹಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ನಾಯಕರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣಗಳು ಡಿಸೆಂಬರ್ 18ರೊಳಗೆ ಇತ್ಯರ್ಥ ಆಗುವುದು ಶತಸಿದ್ಧ. ಪ್ರಜ್ವಲ್‌ ರೇವಣ್ಣ, ಎಚ್.ಡಿ. ರೇವಣ್ಣ, ಸೂರಜ್ ರೇವಣ್ಣ ಹಾಗೂ ಎ ಮಂಜು ಅವರ ಶಾಸಕ ಸ್ಥಾನ ಅನರ್ಹ ಆಗುವುದು ಸತ್ಯ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.