
ಹಾಸನ: ನಗರದ ರೈಲ್ವೆ ನಿಲ್ದಾಣ ಸಮೀಪದ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಬೆಳಿಗ್ಗೆಯಿಂದ ಸಂಜೆವರೆಗೂ ವಿವಿಧ ಧಾರ್ಮಿಕ ಕಾರ್ಯ ಹಾಗೂ ಅನ್ನ ಸಂತರ್ಪಣೆ ನೆರವೇರಿತು.
ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, 9 ಕ್ಕೆ ಮಾರುತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ಸಾವಿರಾರು ಮಂದಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಸಂಜೆ ಮಾರುತಿ ಉತ್ಸವ, ಮಹಾಮಂಗಳಾರತಿ ಹಾಗೂ ಉಯ್ಯಾಲೆ ಸೇವೆ ನೆರವೇರಿಸಲಾಯಿತು.
ದೇವಾಲಯದ ಅರ್ಚಕ ರಕ್ಷಿತ್ ಭಾರದ್ವಾಜ್ ಮಾತನಾಡಿ, ಕೆಎಸ್ಅರ್ಟಿಸಿ ಡಿಪೋ ಬಳಿಯ ಆಂಜನೇಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಸುತ್ತಿದ್ದು, ಮಾರುತಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಾವಿರಾರು ಜನರಿಗೆ ಅನ್ನದಾನ ಮಾಡಲಾಗಿದ್ದು, ಭಗವಂತನು ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.
ನಗರದ ದೇವಿಗೆರೆ ಬಳಿಯ ನೀಲುವಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆದವು. ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.