ADVERTISEMENT

ಹಾಸನದಲ್ಲೂ ಸಿಪಿಐ ಸ್ಪರ್ಧೆ

ಮುಂಬರುವ ಲೋಕಸಭೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 12:45 IST
Last Updated 11 ಫೆಬ್ರುವರಿ 2019, 12:45 IST
ಎಂ.ಸಿ.ಡೋಂಗ್ರೆ
ಎಂ.ಸಿ.ಡೋಂಗ್ರೆ   

ಹಾಸನ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾಧ್ಯಕ್ಷ ಎಂ.ಸಿ.ಡೋಂಗ್ರೆ ಹೇಳಿದರು.

ಹಿಂದೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಈ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯುವುದೇ ಎಂಬುದನ್ನು ರಾಜ್ಯ ಸಮಿತಿ ಜತೆ ಚರ್ಚಿಸಲಾಗುವುದು. ಮುಂದಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ನಡೆಯುವ ಜಿಲ್ಲಾ ಸಮಾವೇಶದಲ್ಲಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು. ಇನ್ನೂ ಪಕ್ಷಕ್ಕೆ ಆರ್ಥಿಕ ಶಕ್ತಿ ತುಂಬಲು ಫೆ.18 ರಿಂದ 28ರ ವರೆಗೆ ಜಿಲ್ಲೆಯಾದ್ಯಂತ ಸಾರ್ವಜನಿಕರಿಂದ ನಿಧಿ ಸಂಗ್ರಹ ಕಾರ್ಯಕ್ರಮ ನಡೆಸಲಾಗುವುದು ಎಂದರು.

ADVERTISEMENT

ಫೆ. 26ರಂದು ಬೇಲೂರು ತಾಲ್ಲೂಕು, ಅರೇಹಳ್ಳಿ ಗ್ರಾಮ ಪಂಚಾಯಿತಿ, ಬಿಕ್ಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನಗಳಿಗೆ ಹಕ್ಕುಪತ್ರ ದೊರೆಯದ ಫಲಾನುಭವಿಗಳಿಂದ ಬೇಲೂರು ತಹಶೀಲ್ದಾರ್‌ ಕಚೇರಿಗೆ ಪಾದಯಾತ್ರೆ ನಡೆಸಿ ಹಕ್ಕುಪತ್ರ ಕೊಡಿಸಲು ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಸಿಪಿಐ ಪಕ್ಷದ ರಾಜ್ಯ ಸಮಿತಿ ಸದಸ್ಯ ಬಿ.ಅಮ್ಜಾದ್ ಮಾತನಾಡಿ, ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಜನಪರ ಕಾರ್ಯಗಳು ನಡೆಯುತ್ತಿಲ್ಲ. ಸರ್ಕಾರ ಉರುಳಿಸುವುದು ಹಾಗೂ ಕಾಪಾಡಿಕೊಳ್ಳುವುದರ ಬಗ್ಗೆಯೇ ಹೆಚ್ಚು ಕಾಲಾಹರಣ ಮಾಡಲಾಗುತ್ತಿದೆ. ಇದಕ್ಕೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ರೈತ ಸಂಘದ ಜಿಲ್ಲಾ ಅಧ್ಯಕ್ಷ ಕೊಟ್ಟೂರು ಶ್ರೀನಿವಾಸ್ ಹಾಗೂ ಎಂ.ಸಿ.ಡೋಂಗ್ರೆ ಆಕಾಂಕ್ಷಿಗಳು ಎಂದು ತಿಳಿಸಿದರು.
ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಧರ್ಮರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.