ADVERTISEMENT

PU ಪರೀಕ್ಷೆ | ಅಗತ್ಯವಿದ್ದರೆ ವಾಹನ, ವಸತಿ ವ್ಯವಸ್ಥೆ ಮಾಡಿ: ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:32 IST
Last Updated 24 ಫೆಬ್ರುವರಿ 2026, 7:32 IST
ಕೆ.ಎಸ್. ಲತಾಕುಮಾರಿ
ಕೆ.ಎಸ್. ಲತಾಕುಮಾರಿ   

ಹಾಸನ: ಗ್ರಾಮೀಣ ಪ್ರದೇಶ ಹಾಗೂ ಗುಡ್ಡಗಾಡು ಪ್ರದೇಶದಿಂದ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಅಗತ್ಯವಿದ್ದರೆ ಕೆಎಸ್‌ಆರ್‌ಟಿಸಿ ಬಸ್‍ಗಳನ್ನು ಹೊರತುಪಡಿಸಿ, ಇತರೆ ವಾಹನ ಹಾಗೂ ವಸತಿ ವ್ಯವಸ್ಥೆ ಮಾಡುವಂತೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಿಯುಸಿ ಹಾಗೂ ಎಸ್ಎಸ್ಎಲ್‌ಸಿ ಪರೀಕ್ಷೆ ಪೂರ್ವ ಸಿದ್ಧತೆಗಳ ಕುರಿತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಶೌಚಾಲಯಗಳಲ್ಲಿ ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿರಬೇಕು. ಪರೀಕ್ಷಾ ಕಾರ್ಯಕ್ಕೆ ನೇಮಕವಾದ ಸಿಬ್ಬಂದಿ ಹೊರತುಪಡಿಸಿ, ಇತರೆ ಸಿಬ್ಬಂದಿಗೆ ಪರೀಕ್ಷಾ ಕೇಂದ್ರ ಪ್ರವೇಶವನ್ನು ನಿರ್ಬಂಧಿಸಬೇಕು. ಪರೀಕ್ಷಾ ಕೇಂದ್ರಗಳ ಆವರಣ ಹಾಗೂ ಕೊಠಡಿಗಳು ಸ್ವಚ್ಛವಾಗಿರಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ಹೆಚ್ಚಿನ ಬಸ್‍ಗಳು ನಿಯೋಜಿಸುವಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಪರೀಕ್ಷಾ ಕೇಂದ್ರದಲ್ಲಿ ವೈದ್ಯಕೀಯ ತಂಡ ಇರಬೇಕು. ತುರ್ತು ಪರಿಸ್ಥಿತಿಯಲ್ಲಿ ಅನುಕೂಲವಾಗಲು ಆಂಬುಲೆನ್ಸ್‌ಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕು. ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಆಗದಂತೆ ಕೆಪಿಟಿಸಿಎಲ್ ಹಾಗೂ ಚೆಸ್ಕಾಂ ಅಧಿಕಾರಿಗಳು ಎಚ್ಚರವಹಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯಸ್ಥರಲ್ಲಿ ಸಂಬಂಧಪಟ್ಟ ಅಧಿಕಾರಿಗಳ ದೂರವಾಣಿ ಸಂಖ್ಯೆ ಇರಬೇಕು. ಮಕ್ಕಳು ಪರೀಕ್ಷೆ ಬರೆಯುವ ಕೇಂದ್ರಗಳಲ್ಲಿ ತಂದೆ-ತಾಯಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಸೂಚಿಸಿದರು.

ಸಾಮಾನ್ಯ ಕ್ಯಾಲ್ಕುಲೇಟರ್ ಹೊರತು ಪಡಿಸಿ, ಇತರೆ ಯಾವುದೇ ರೀತಿಯ ಎಲೆಕ್ಟ್ರಿಕಲ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದಲ್ಲಿ ಬಳಸುವಂತಿಲ್ಲ. ಪರೀಕ್ಷೆ ಸಿದ್ಧತೆಗಳ ಬಗ್ಗೆ, ಇತರೆ ವಿಷಯ ಸೇರಿದಂತೆ ಯಾವುದೇ ಗೊಂದಲಗಳಿಗಾಗಿ ಸಹಾಯವಾಣಿ ತೆರೆಯಬೇಕು.. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ವಾಹನದ ವ್ಯವಸ್ಥೆ ಆಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಯಾವುದೇ ಗೊಂದಲ ಉಂಟು ಮಾಡಿಕೊಳ್ಳದಂತೆ ಸಲಹೆ ನೀಡಬೇಕು. ಪರೀಕ್ಷಾ ಸಮಯದಲ್ಲಿ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಲು ಮಾರ್ಗದರ್ಶನ ನೀಡಬೇಕು. ಜಿಲ್ಲೆಯಲ್ಲಿ ಒಂದು ವಿದ್ಯಾರ್ಥಿಯೂ ಪರೀಕ್ಷೆಗೆ ಬರೆಯಲು ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು 40 ನಿಮಿಷ ಮುಂಚಿತವಾಗಿ ಸಮವಸ್ತ್ರದಲ್ಲಿ ಪರೀಕ್ಷಾ ಕೇಂದ್ರಕ್ಕೆ ಹಾಜರಿರಲು ಮೊದಲೇ ಮನವರಿಕೆ ಮಾಡಿರಬೇಕು ತಿಳಿಸಿದರು.

ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ಪರೀಕ್ಷಾ ಕೇಂದ್ರಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಸಿದ್ಧತೆ, ವ್ಯವಸ್ಥೆಗಳನ್ನು ಪರಿಶೀಲಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಾರುತಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.