ADVERTISEMENT

ಹಾಸನ | ಔಷಧಿಗಳನ್ನು ಹೊರಗಿನಿಂದ ತರಲು ಹೇಳಬೇಡಿ: ಜಿಲ್ಲಾಧಿಕಾರಿ ಲತಾಕುಮಾರಿ

ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 5:48 IST
Last Updated 29 ಜುಲೈ 2025, 5:48 IST
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ಮಾತನಾಡಿದರು
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ಮಾತನಾಡಿದರು   

ಹಾಸನ: ‘ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದರ ಜೊತೆಗೆ ಔಷಧಿಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಔಷಧಿಗಳಿಗೆ ಹೊರಗೆ ತೆಗೆದುಕೊಳ್ಳಿ ಎಂದು ಚೀಟಿ ಬರೆದು ಕೊಡದಂತೆ ನಿಗಾವಹಿಸಿ’ ಎಂದು ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ರಕ್ತ ಪರೀಕ್ಷೆ ಮಾಡಿದ ಸಂದರ್ಭದಲ್ಲಿ ವಿಳಂಬ ಆಗದಂತೆ ಶೀಘ್ರ ವರದಿಯನ್ನು ರೋಗಿಗಳಿಗೆ ಒದಗಿಸಬೇಕು. ಅಗತ್ಯ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡಬೇಕು’ ಎಂದರು.

ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಎಪ್ರಾನ್‌ ಧರಿಸುವಂತೆ ಹಾಗೂ ಶಿಸ್ತಿನಿಂದ ಇರುವಂತೆ ನೋಡಿಕೊಳ್ಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯ ಇಲ್ಲದಿದ್ದಲ್ಲಿ ಎಂಪೆನೆಲ್ ಆಗಿರುವ ಖಾಸಗಿ ಆಸ್ಪತ್ರೆಗೆ ತಕ್ಷಣ ರೋಗಿಯನ್ನು ಕಳುಹಿಸುವ ಮೂಲಕ ಉಚಿತ ಚಿಕಿತ್ಸೆ ಕಲ್ಪಿಸಿ, ಪ್ರಾಣ ಉಳಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ADVERTISEMENT

ಪಿಎಂಜೆಜೆವೈ ಹಾಗೂ ಪಿಎಂಎಸ್‌ಬಿವೈಗೆ ಪ್ರತಿಯೊಬ್ಬರನ್ನು ನೋಂದಣಿ ಮಾಡಿಸುವಂತೆ ತಿಳಿಸಿದ ಅವರು, ಆಂಬುಲೆನ್ಸ್ ಸುಸ್ಥಿತಿಯಲ್ಲಿದ್ದು, ಕರ್ತವ್ಯ ನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಎಂ.ಆರ್. ಸ್ಕ್ಯಾನ್ ಮತ್ತು ಸಿಟಿ ಸ್ಕ್ಯಾನ್‌ಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸದಂತೆ ಎಚ್ಚರ ವಹಿಸಬೇಕು. ಊಟದ ಸಂದರ್ಭದಲ್ಲಿ ಹೊರರೋಗಿಗಳ ಕೌಂಟರ್‌ನಲ್ಲಿ ಒಬ್ಬರು ಸಿಬ್ಬಂದಿಯನ್ನು ಸಾರ್ವಜನಿಕರಿಗೆ ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬ್ಯಾಂಕ್‍ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವ ಮೂಲಕ ಸ್ಪಂದಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ತಿಳಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಡಾ.ಶ್ರುತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ– ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಬಾಲ್ಯ ವಿವಾಹ ತಡೆಗೆ ಸೂಚನೆ

ಬಾಲ್ಯ ವಿವಾಹ ಬಾಲ ಗರ್ಭಿಣಿಯರು ಹಾಗೂ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತಹಶೀಲ್ದಾರರು ಎಚ್ಚರ ವಹಿಸಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ವಲಸೆ ಕಾರ್ಮಿಕರ ಪಟ್ಟಿ ತಯಾರಿಸಬೇಕು. ಮಾನವ ಹಕ್ಕು ಮಕ್ಕಳ ಹಕ್ಕು ಮಹಿಳೆಯರ ಹಕ್ಕುಗಳು ಉಲ್ಲಂಘನೆ ಆಗದಂತೆ ನಿಗಾವಹಿಸಿ ಹಕ್ಕುಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಹತ್ತಿರದ ಸರ್ಕಾರಿ ಶಾಲೆಗಳಿಗೆ ಸೇರಿಸಿ. ಉಚಿತ ಪುಸ್ತಕಗಳ ವಿತರಣೆ ಬಿಸಿಯೂಟದ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಹತ್ತಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ತಾತ್ಕಾಲಿಕವಾಗಿ ಅಂಗನವಾಡಿ ತೆರೆಯುವಂತೆ ತಾಕೀತು ಮಾಡಿದರು. ವಲಸೆ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಿಸಬೇಕು. ಆಧಾರ್ ಕಾರ್ಡ್ ಇರುವವರು ಹಾಗೂ ಇಲ್ಲದವರನ್ನು ಪಟ್ಟಿ ಮಾಡಿ ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಆಧಾರ್ ಕಾರ್ಡ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.