
ಹಾಸನ: ಮಹಾನಗರದ ಸರ್ವತೋಮುಖ ಅಭಿವೃದ್ಧಿಗೆ ಪಾಲಿಕೆಯ ಎಲ್ಲ ಸದಸ್ಯರು ಹಾಗೂ ಜನಪ್ರತಿನಿಧಿಗಳ ಒಮ್ಮತದ ತೀರ್ಮಾನದಂತೆ ಹಲವು ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮೇಯರ್ ಗಿರೀಶ್ ಚನ್ನವೀರಪ್ಪ ತಿಳಿಸಿದರು.
ಇಲ್ಲಿನ ಮಹಾನಗರ ಪಾಲಿಕೆಯ ರಾಷ್ಟ್ರಕವಿ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಕರೆಯಲಾಗಿದ್ದ ವಿಶೇಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರುವರಿ 7 ಮತ್ತು 18 ರಂದು ಮಾಜಿ ಮೇಯರ್ ಚಂದ್ರೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾದ ಸುಮಾರು ₹ 6 ಕೋಟಿ ವೆಚ್ಚದ 37 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.
ಸೆಪ್ಟೆಂಬರ್ 25ರಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾದ ₹ 17 ಕೋಟಿ ವೆಚ್ಚದ 82 ಕಾಮಗಾರಿಗಳಿಗೆ ಎಲ್ಲ ಸದಸ್ಯರು ಸರ್ವಾನುಮತದಿಂದ ಅನುಮೋದನೆ ನೀಡಿದ್ದಾರೆ ಎಂದರು.
ಇತ್ತೀಚಿಗೆ ಕರೆಯಲಾಗಿದ್ದ ₹ 24 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಎರಡು ಟೆಂಡರ್ ಪ್ರಕ್ರಿಯೆಗೂ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು ಸಹ ನಮ್ಮ ಹಾಗೂ ಸದಸ್ಯರ ಮನವಿ ಮೇರೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಸ್ಥಳೀಯ ಶಾಸಕರ ಕ್ಷೇತ್ರಾಅಭಿವೃದ್ಧಿ ನಿಧಿಗೆ ರಾಜ್ಯ ಸರ್ಕಾರ ₹ 25 ಕೋಟಿ ಬಿಡುಗಡೆ ಮಾಡುತ್ತಿದ್ದು, ಇದರಲ್ಲಿ ಸುಮಾರು ₹ 6.25 ಕೋಟಿ ಅನ್ನು ನಗರದ ಅಭಿವೃದ್ಧಿಗೆ ಬಿಡುಗಡೆ ಮಾಡಲು ಪಾಲಿಕೆಯ ಅನುಮೋದನೆ ಕೋರಿದ್ದರು. ಅದರಂತೆ ಎಲ್ಲ ಸದಸ್ಯರು ಒಪ್ಪಿಗೆ ಸೂಚಿಸಿದ್ದು, ಅಗತ್ಯಕ್ಕೆ ತಕ್ಕಂತೆ ವಾರ್ಡ್ಗಳ ಅಭಿವೃದ್ಧಿಗೆ ಅನುದಾನ ವಿನಯೋಗಿಸಲಾಗುವುದು ಎಂದು ವಿವರಿಸಿದರು.
ಪಾಲಿಕೆ ಆಯುಕ್ತ ಕೃಷ್ಣಮೂರ್ತಿ, ಎಂಜಿನಿಯರ್ ಕವಿತಾ, ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.