ರಣದೀಪ್ ಸಿಂಗ್ ಸುರ್ಜೆವಾಲ
– ಪ್ರಜಾವಾಣಿ ಚಿತ್ರ
ಹಾಸನ: ದೇಶದಲ್ಲಿರುವ ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳಿಗೆ ಬಲ ತುಂಬಿಸುವ ಉದ್ದೇಶದಿಂದ ಡಾ.ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ. ಆದರೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಆದಿವಾಸಿಗಳು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳು, ಮಹಿಳೆಯರು, ಯುವಕರ ಜೀವನದ ಮೇಲೆ ದಾಳಿ ಮಾಡುತ್ತಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲ ಆರೋಪಿಸಿದರು.
ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಸರ್ವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ದಾಳಿ ಮಾಡುತ್ತಿದೆ. ಇದು ರಾಜ್ಯದ ಜನರ ಮೇಲಿನ ಮೇಲೆ ಮಾಡುತ್ತಿರುವ ಹಲ್ಲೆ ಎಂದು ಹೇಳಿದರು.
ಕಾಂಗ್ರೆಸ್ನ ಗ್ಯಾರಂಟಿಗಳ ಮೇಲೆ ದಾಳಿ ಮಾಡುವ ಮೂಲಕ ರಾಜ್ಯದ ಬಡವರು, ದುರ್ಬಲ ವರ್ಗದವರ ಶಕ್ತಿಯನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ರಾಜ್ಯದ ಗೃಹಲಕ್ಷ್ಮಿಯರಿಗೆ ಸಿಗುತ್ತಿರುವ ಮಾಸಿಕ ₹2 ಸಾವಿರ, ಗೃಹಜ್ಯೋತಿಯ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗದ ಯೋಜನೆಯ ಹಣ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಆದರೆ, ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಇರುವವರೆಗೂ ಇಂತಹ ಪ್ರಯತ್ನಗಳು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂದು ತಿರುಗೇಟು ನೀಡಿದರು.
ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ತೆರಿಗೆಯನ್ನು ಶೇ 33 ರಿಂದ ಶೇ 22 ಕ್ಕೆ ಇಳಿಸುವ ಮೂಲಕ ಕೋಟ್ಯಂತರ ರೂಪಾಯಿ ಕೊಟ್ಟಿದೆ. ಆದರೆ, ₹58 ಸಾವಿರ ಕೋಟಿಯನ್ನು ನೇರವಾಗಿ ಬಡವರ ಖಾತೆಗೆ ಜಮೆ ಮಾಡುತ್ತಿರುವ ರಾಜ್ಯ ಸರ್ಕಾರದ ಯೋಜನೆಯನ್ನು ಸಹಿಸಿಕೊಳ್ಳಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಉದ್ಯಮಿಗಳ ₹78 ಸಾವಿರ ಕೋಟಿ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರ ಜನರ ಖಾತೆಗೆ ₹58 ಸಾವಿರ ಕೋಟಿ ಹಾಕುತ್ತಿದೆ ಎಂದು ಹೇಳಿದರು.
ನಾವು ಸಂವಿಧಾನದ ರಕ್ಷಣೆ ಮಾಡುತ್ತೇವೆ. ಜೊತೆಗೆ ಹಿಂದುಳಿದವರು, ಶೋಷಿತರ ಹಕ್ಕುಗಳ ರಕ್ಷಣೆ ಮಾಡುತ್ತೇವೆ. ವಿವಿಧ ಜಾತಿಗಳ ಜನರು ಎಲ್ಲರೂ ಒಂದಾಗಿದ್ದೇವೆ. ಇದುವೇ ನಮ್ಮ ಭಾರತ ಎಂಬುದನ್ನು ಕೇಂದ್ರ ಮೋದಿ ನೇತೃತ್ವದ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.