ADVERTISEMENT

ಹಾಸನ | ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಒತ್ತಾಯ

ಪೊಲೀಸ್ ಇಲಾಖೆಗೆ ಬೊಲೆರೋ ವಾಹನ ಹಸ್ತಾಂತರಿಸಿದ ಶಾಸಕ ಸ್ವರೂಪ್‌

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 5:43 IST
Last Updated 8 ಫೆಬ್ರುವರಿ 2026, 5:43 IST
ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶುಭನ್ವಿತಾ ಅವರಿಗೆ ಶಾಸಕ ಸ್ವರೂಪ್‌ ಪ್ರಕಾಶ್‌ ವಾಹನ ಹಸ್ತಾಂತರಿಸಿದರು.
ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶುಭನ್ವಿತಾ ಅವರಿಗೆ ಶಾಸಕ ಸ್ವರೂಪ್‌ ಪ್ರಕಾಶ್‌ ವಾಹನ ಹಸ್ತಾಂತರಿಸಿದರು.   

ಹಾಸನ: ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದ ವತಿಯಿಂದ ನೀಡಲಾದ ಬೊಲೆರೋ ವಾಹನವನ್ನು ಶಾಸಕ ಸ್ವರೂಪ್‌ ಪ್ರಕಾಶ್‌ ಶನಿವಾರ ಹಾಸನ ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

ಸ್ವರೂಪ್ ಪ್ರಕಾಶ್ ಅವರ ಜೊತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶುಭನ್ವಿತಾ ಅವರು ಹಸಿರು ನಿಶಾನೆ ತೋರುವ ಮೂಲಕ ವಾಹನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್, ಹಾಸನ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ ಸಿಬ್ಬಂದಿ ಕೊರತೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ಒಂದಿಷ್ಟು ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೇನೆ ಎಂದರು.

ADVERTISEMENT

ಹಾಸನ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವಾಹನಗಳ ಕೊರತೆ ಇರುವುದು ತನ್ನ ಗಮನಕ್ಕೆ ಬಂದ ನಂತರ ಖಾಸಗಿ ಆಸ್ಪತ್ರೆ ಮಾಲೀಕರ ಸಂಘದ ಸಹಯೋಗದಲ್ಲಿ ಒಂದು ಬೊಲೆರೋ ವಾಹನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮೂರು ವಾಹನಗಳನ್ನು ನೀಡಲು ಯೋಚಿಸಲಾಗಿದೆ ಎಂದರು.

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಒಂದು ಹೆಚ್ಚುವರಿ ಪೊಲೀಸ್ ಠಾಣೆ ಹಾಗೂ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಆಗುವುದಿಲ್ಲ ಎಂಬ ಉತ್ತರ ನೀಡುವ ಮೂಲಕ ಸರ್ಕಾರ ಹಾಸನವನ್ನು ಕಡೆಗಣಿಸಿದೆ. ಶಾಸಕರಿಗೆ ಬರುವ ಅನುದಾನವನ್ನು ಕಡಿತಗೊಳಿಸಿ ಅಭಿವೃದ್ಧಿಗೆ ಮಾರಕವಾಗಿದೆ. ಮುಂದಿನ ದಿನಗಳಲ್ಲಾದರೂ ಹೆಚ್ಚಿನ ಅನುದಾನ ಹಾಗೂ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿ ಪೊಲೀಸ್ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.

ಹಾಸನ ನಗರ ಭಾಗದಲ್ಲಿ ನಿತ್ಯ 12 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ಮಾಡುತ್ತವೆ. ಅದಕ್ಕೆ ಅನುಗುಣವಾಗಿ ಪೊಲೀಸ್‌ ಇಲಾಖೆಗೆ ಸಿಬ್ಬಂದಿ ನೇಮಕ ಆಗಬೇಕು. ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದ್ದು, ಅದಕ್ಕೂ ಮುಂದಿನ 3 ವರ್ಷಗಳ ಕಾಲ ಅನುದಾನ ನೀಡಲು ಆಗುವುದಿಲ್ಲ ಎಂಬ ಲಿಖಿತ ಉತ್ತರ ನೀಡಿದ್ದಾರೆ. ಇದು ಬೇಸರ ತಂದಿದೆ ಎಂದರು.

ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಗ್ಯಾರಂಟಿ ಯೋಜನೆಗಳಿಂದಾಗಿ ಅನುದಾನವಿಲ್ಲದೆ ಶಾಸಕರು ಕಂಗಾಲಾಗಿದ್ದಾರೆ. ಸರ್ಕಾರ ಗ್ಯಾರಂಟಿ ಗುರಿಯಾಗಿ ಇಟ್ಟುಕೊಂಡು ಬೇರೆ ಅಭಿವೃದ್ಧಿ ಮಾಡದೇ ನಿರ್ಲಕ್ಷ ತೋರಿದೆ.

-ಸ್ವರೂಪ್‌ ಪ್ರಕಾಶ್‌ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.