ADVERTISEMENT

ಹಾಸನ | ರೈತ, ಕಾರ್ಮಿಕ ವಿರೋಧಿ ಕಾಯ್ದೆ ರದ್ದಾಗಲಿ-ಪ್ರತಿಭಟನೆ

ಕಾರ್ಮಿಕ, ಜನಪರ ಸಂಘಟನೆಗಳಿಂದ ಪ್ರತಿಭಟನೆ: ಅಂಚೆ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:36 IST
Last Updated 13 ಫೆಬ್ರುವರಿ 2026, 7:36 IST
ಕಾರ್ಮಿಕ ಸಂಘಟನೆಗಳ ವತಿಯಿಂದ ಗುರುವಾರ ಹಾಸನದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು
ಕಾರ್ಮಿಕ ಸಂಘಟನೆಗಳ ವತಿಯಿಂದ ಗುರುವಾರ ಹಾಸನದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು   

ಹಾಸನ: ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶವ್ಯಾಪಿ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು), ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಎಚ್‌ಕೆ), ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಎದುರು ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾವೀರ ವೃತ್ತ, ಕಸ್ತೂರಬಾ ರಸ್ತೆ, ಎನ್.ಆರ್. ವೃತ್ತ ಹಾಗೂ ಸಿಟಿ ಬಸ್ ನಿಲ್ದಾಣದ ರಸ್ತೆ ಮೂಲಕ ಸಾಗಿತು. ಮೆರವಣಿಗೆಯ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಗರದ ಪ್ರಧಾನ ಅಂಚೆ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದ‌ ನೂರಾರು ಪ್ರತಿಭಟನಾಕಾರರು, ರೈತ, ಕಾರ್ಮಿಕ ವಿರೋಧಿ ಸಂಹಿತೆ ರದ್ದಾಗಲಿ ಎಂಬುದು ಸೇರಿದಂತೆ ನಾನಾ ಘೋಷಣೆ ಕೂಗಿದರು. ಬಳಿಕ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಈ ವೇಳೆ ಮಾತನಾಡಿದ ಮುಖಂಡರು, 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳ ಮೇಲೆ ನೇರ ದಾಳಿ ನಡೆಸಿವೆ. ಈ ಸಂಹಿತೆಗಳ ಪರಿಣಾಮವಾಗಿ ಶೇ 90ರಷ್ಟು ಕಾರ್ಮಿಕರು ಕನಿಷ್ಠ ವೇತನ, ಇಎಸ್‌ಐ, ಪಿಎಫ್, ಗ್ರಾಚ್ಯುಟಿ ಹಾಗೂ ಬೋನಸ್ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.

ಜೀವನೋಪಾಯ ವೇತನದ ಯಾವುದೇ ಖಾತರಿ ಇಲ್ಲದೇ ತಳಮಟ್ಟದ ಕೂಲಿಯನ್ನು ನಿಗದಿ ಮಾಡಲಾಗಿದೆ. ಕಾರ್ಮಿಕರ ಸಂಘ ರಚಿಸುವ ಹಕ್ಕುಗಳನ್ನು ನಿರ್ಬಂಧಿಸಲಾಗಿದ್ದು, ಸಾಮೂಹಿಕ ಚೌಕಾಸಿಯ ಶಕ್ತಿ ಕುಂದಿಸಲಾಗಿದೆ. ಮುಷ್ಕರ ನಡೆಸಿದರೆ ದಂಡ, ಜೈಲು ಮತ್ತು ವೇತನ ಕಡಿತದಂತಹ ಕಠಿಣ ಕ್ರಮಗಳನ್ನು ವಿಧಿಸುವ ಮೂಲಕ ಕಾರ್ಮಿಕರ ಧ್ವನಿಯನ್ನು ದಮನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

‘ನಿಗದಿತ ಅವಧಿಯ ಉದ್ಯೋಗ ಪದ್ಧತಿ ಜಾರಿಯಿಂದ ಕಾಯಂ ಉದ್ಯೋಗ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕಾರ್ಮಿಕ ಕಾನೂನುಗಳು ಕಾರ್ಮಿಕರ ಹಕ್ಕುಗಳನ್ನು ಹಿಂಸಿಸುತ್ತಿವೆ. ಜೊತೆಗೆ ರೈತಪರ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ದೂರಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುಷ್ಪಾ, ಎಐಟಿಯುಸಿ ಜಿಲ್ಲಾ‌ ಘಟಕದ ಅಧ್ಯಕ್ಷ ಎಂ.ಸಿ.ಡೋಂಗ್ರೆ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಆರ್. ನವೀನ್ ಕುಮಾರ್, ರೈತ ಮುಖಂಡ ಬಾಬು, ಬ್ಯಾಂಕ್ ನೌಕರರ ಸಂಘಟನೆಯ ಪರಮಶಿವಯ್ಯ, ಆರ್.ಕುಮಾರ್, ದಲಿತ ಮುಖಂಡರಾದ ರಾಜಶೇಖರ್, ಈರೇಶ್ ಹೀರೆಹಳ್ಳಿ, ವಿಮಾ ನೌಕರರ ಸಂಘದ ವಿಶ್ವನಾಥ್, ರವಿಕುಮಾರ್, ಸಂವಿಧಾನ ಓದು ಅಭಿಯಾನದ ರಾಜು ಗೊರೂರು, ಸಿಐಟಿಯುನ ಅರವಿಂದ್, ಎಸ್‌ಎಫ್ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಮುಂತಾದವರು ಭಾಗವಹಿಸಿದ್ದರು‌.

ನರೇಗಾ ಕಾಯ್ದೆಯಡಿ ಖಾತರಿಪಡಿಸಲಾದ ಕೆಲಸ ಹಕ್ಕು ಕಸಿಯುವ ಹುನ್ನಾರ ಕೇಂದ್ರ ಸರ್ಕಾರದ ₹53.5 ಲಕ್ಷ ಕೋಟಿ ಬಜೆಟ್‌ನಲ್ಲಿ ಬಂಡವಾಳಿಗರಿಗೆ ಮಣೆ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಜಾರಿಗೆ ಮಾಡಲು ಹೊರಟ ರಾಜ್ಯ ಸರ್ಕಾರ

‘ಕಾರ್ಮಿಕ ಸಂಹಿತೆ ಹಿಂಪಡೆಯಿರಿ’ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಕನಿಷ್ಠ ವೇತನ ಹೆಚ್ಚಿಸಬೇಕು ಸಾರ್ವಜನಿಕ ವಲಯದ ಸಂಸ್ಥೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು‌. ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ವಿದ್ಯುತ್ ತಿದ್ದುಪಡಿ ಕಾಯ್ದೆ ಬೀಜ ಮಸೂದೆ ಭೂಸ್ವಾಧೀನ ಕಾಯ್ದೆ ಸೇರಿದಂತೆ ಜನವಿರೋಧಿ ಮಸೂದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.