ಹಾಸನ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಪಘಾತ ವಲಯ ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಅವೈಜ್ಞಾನಿಕವಾಗಿರುವ ರಸ್ತೆಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹೆಚ್ಚು ಸಾವು ಸಂಭವಿಸುತ್ತಿರುವುದು ಅಪಘಾತಗಳಿಂದ ಇದರ ಬಗ್ಗೆ ಯಾರಿಗೂ ಅರಿವಿಲ್ಲ. ಉದಾಸೀನದಿಂದ ವಾಹನ ಚಲಾಯಿಸಿ ಅವಘಡಗಳು ಸಂಭವಿಸುವುದರಿಂದ ಅಮಾಯಕ ಕುಟುಂಬಗಳು ನೋವು ಅನುಭವಿಸುತ್ತಾರೆ ಎಂದರು.
ರಸ್ತೆ ಒತ್ತುವರಿ ತೆರವುಗೊಳಿಸುವುದು, ಮುಖ್ಯ ರಸ್ತೆಗಳಲ್ಲಿ ಪಾದಚಾರಿಗಳ ಸಂಚಾರಕ್ಕೆ ಮೀಸಲಿರುವ ಸ್ಥಳದಲ್ಲಿ ಯಾವುದೇ ಪದಾರ್ಥಗಳನ್ನು ಮಾರಾಟ ಮಾಡಲು ಅವಕಾಶ ನೀಡದಂತೆ ತೆರವುಗೊಳಿಸುವ ನಿಟ್ಟಿನಲ್ಲಿ ಡಂಗೂರ ಸಾರಿಸಿ, ನೋಟಿಸ್ ನೀಡಿ, ಪತ್ರಿಕಾ ಪ್ರಕಟಣೆ ನೀಡಿ ನಂತರ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಸ್ತೆ ಸುರಕ್ಷತಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ದ್ವಿಚಕ್ರ ವಾಹನ ಚಲಾಯಿಸುವವರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಯುವ ಜನತೆ ಬಹಳ ಲಘುವಾಗಿ ಪರಿಗಣಿಸಬಾರದು. ಇದರಿಂದ ಆಗುವ ಅವಘಡಗಳನ್ನು ತಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಪದವಿ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಹೆಲ್ಮೆಟ್ ಕಡ್ಡಾಯ ಹಾಕಿಕೊಂಡು ಬರದಿದ್ದಲ್ಲಿ ಕಾಲೇಜು ಆವರಣಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರು ನಿಗಾ ವಹಿಸುವಂತೆ ಸೂಚಿಸಿದರು.
ಶಾಲಾ– ಕಾಲೇಜುಗಳಲ್ಲಿ ಮಾಹಿತಿಗಾಗಿ ರಸ್ತೆ ಸುರಕ್ಷತಾ ಚಿನ್ಹೆಗಳ ಫಲಕ ಅಳವಡಿಸಬೇಕು. ಸಂಚಾರ ನಿಯಮಗಳ ಕುರಿತು ಶಾಲಾ– ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಿಗೆ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.
ಘಟನೆ ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದು ಸರಿಯಲ್ಲ. ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಕೂಡಲೇ ಸಭೆ ನಡೆಸಿ, ಸಂಚಾರ ನಿಯಮಗಳ ಪಾಲನೆ ಮತ್ತು ರಸ್ತೆ ಅಪಘಾತಗಳ ತಡೆಗಟ್ಟುವ ನಿಟ್ಟಿನಲ್ಲಿ ತಹಶೀಲ್ದಾರ್ಗಳು ಕ್ರಮ ಕೈಗೊಳ್ಳಲು ಸೂಚಿಸಿದರು.
ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸ್ಥಳೀಯವಾಗಿ ಪರಿಶೀಲಿಸಿ, ಅಪಘಾತ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಮಿತಿ ರಚನೆ ಮಾಡುವಂತೆ ಸೂಚಿಸಿದರು.
ಟೋಲ್ ಪ್ಲಾಜ್ಹಾಗಳಲ್ಲಿ ಬ್ರೆಥ್ ಅನಲೈಜರ್ ಮಿಷನ್ ಇಡಬೇಕು. ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಕಡ್ಡಾಯವಾಗಿ ತುರ್ತು ಸಂದರ್ಭದಲ್ಲಿ ಬಳಕೆಗೆ 2 ಅಂಬುಲೆನ್ಸ್ ಲಭ್ಯವಿರುವಂತೆ ನೋಡಿಕೊಳ್ಳಿ. ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವಂತೆಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ನಗರದ ಹೊರವಲಯದಲ್ಲಿ ಜಾಗ ಗುರುತಿಸಬೇಕು. ಶಾಲಾ ವಾಹನ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ವಾಹನ ಪರವಾನಗಿ ಹೊಂದಿರಬೇಕು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಹಿಮ್ಸ್ ನಿರ್ದೇಶಕ ಡಾ.ರಾಜಣ್ಣ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್, ರಪಾಲಿಕೆ ಆಯುಕ್ತ ಕೃಷ್ಣಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಲರಾಂ, ವಿವಿಧ ಇಲಾಖೆಗಳ ಅಧಿಕಾರಿಗಳು ಆಟೋ ಚಾಲಕರ, ಟಿಪ್ಪರ್, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.