
ಹಾಸನ: ಸರ್ಕಾರಿ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರ ನೀಡಲು ನಿರಾಕರಿಸಿರುವುದನ್ನು ಖಂಡಿಸಿ, ಹಾಸನ ಸರ್ಕಾರಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ವಿದ್ಯಾರ್ಥಿ ಕಾಂತರಾಜು ಮಾತನಾಡಿ, ಪ್ರವೇಶ ಶುಲ್ಕ ಹಾಗೂ ಪರೀಕ್ಷಾ ಶುಲ್ಕವನ್ನು ನಿಗದಿತ ಅವಧಿಯಲ್ಲೇ ಪಾವತಿಸಿದ್ದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ಬರೆಯಲು ಅವಕಾಶ ನೀಡದೇ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಜ.19 ರಂದು ಕೆಲವು ವಿದ್ಯಾರ್ಥಿಗಳಿಗೆ ಸಂವಿಧಾನ-1 ವಿಷಯದ ಪರೀಕ್ಷೆ ನಿಗದಿಯಾಗಿದ್ದರೂ ಪ್ರವೇಶ ಪತ್ರ ನೀಡಿಲ್ಲ. ಕಾಲೇಜು ಆಡಳಿತ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಹಾಗೂ ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಬೇಜವಾಬ್ದಾರಿಯಿಂದ ನಮ್ಮ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜ.20 ರಿಂದ ನಾಲ್ಕನೇ ವರ್ಷದ 7ನೇ ಸೆಮಿಸ್ಟರ್ ಪರೀಕ್ಷೆಗಳು ಆರಂಭವಾಗಲಿದ್ದು, ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿದ್ದರೆ 23 ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷವೇ ವ್ಯರ್ಥವಾಗುವ ಆತಂಕ ಎದುರಾಗಿದೆ. ಇದು ವಿದ್ಯಾರ್ಥಿಗಳ ಮಾನಸಿಕ ಒತ್ತಡ ಹೆಚ್ಚಿಸುವುದರ ಜೊತೆಗೆ ಮುಂದಿನ ವೃತ್ತಿ ಜೀವನಕ್ಕೂ ದೊಡ್ಡ ಹೊಡೆತ ಬೀಳಲಿದೆ ಎಂದರು.
ಕಾಲೇಜು ಆಡಳಿತ, ಬಿಸಿಐ ಹಾಗೂ ಹುಬ್ಬಳ್ಳಿ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ತಕ್ಷಣವೇ ತೀವ್ರ ತನಿಖೆ ನಡೆಸಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳನ್ನು ಪರೀಕ್ಷೆಗಳಿಂದ ವಂಚಿತರನ್ನಾಗಿ ಮಾಡದೇ ಕೂಡಲೇ ಪ್ರವೇಶ ಪತ್ರ ನೀಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಬೇಕು. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.
ಭವಿಷ್ಯ, ಅಭಿಷೇಕ್, ಅಜಯ್ ಕುಮಾರ್, ನಿಖಿಲ್, ಚಂದನ್, ಸಂಜನಾ, ಪೂರ್ಣೇಶ್, ಐಶ್ವರ್ಯ, ಮಿತುಲಾ, ಪ್ರಿಯದರ್ಶಿನಿ, ರಶ್ಮಿ, ಅನನ್ಯಾ, ಫಿಹಾ, ಸುಚಿತ್ರ ಸೇರಿದಂತೆ ಇತರೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.