ಹಾಸನ: ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕಎಚ್.ಡಿ. ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕರ ಹುದ್ದೆಗೆ ಅಗೌರವ ಬರುವಂತೆ ಮಾತನಾಡಿದ್ದಾರೆ. ಇದರಿಂದ ರಾಜಕೀಯ ನಾಯಕರು ತಲೆತಗ್ಗಿಸುವಂತಾಗಿದೆ’ ಎಂದು ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡಹೇಳಿದರು.
‘ಸಿದ್ದರಾಮಯ್ಯ ಅವರನ್ನು ವೈಯಕ್ತಿಕವಾಗಿ ಟೀಕೆ ಮಾಡುವ ಭರದಲ್ಲಿ ಕುಮಾರಸ್ವಾಮಿ ಅವರು ಅಸಂವಿಧಾನಿಕ ಪದ ಬಳಕೆ ಮಾಡುವ ಮೂಲಕ ವಿರೋಧ ಪಕ್ಷದ ನಾಯಕರ ಹುದ್ದೆಗೆ ಅಗೌರವ ತಂದಿದ್ದಾರೆ.ಸಾಮಾನ್ಯ ಪರಿಜ್ಞಾನ ಇರುವವರು ಇಂತಹ ಪದ ಬಳಕೆ ಮಾಡುವುದಿಲ್ಲ. ಅವರ ಹೇಳಿಕೆಯಿಂದಾಗಿ ರಾಜಕೀಯನಾಯಕರು ತಲೆ ತಗ್ಗಿಸುವಂತಾಗಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.
‘ವಿರೋಧ ಪಕ್ಷದ ನಾಯಕರ ಹುದ್ದೆ ಅಲಂಕರಿಸಿದ್ದ ಹಾಸನದ ಎಚ್.ಡಿ.ದೇವೇಗೌಡ ಮತ್ತು ಎಸ್.ಶಿವಪ್ಪ ಅವರು ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಜಿಲ್ಲೆಯ ರಾಜಕಾರಣಕ್ಕೆ ವಿಶೇಷಗೌರವವಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.
ಜಿಲ್ಲೆಯ ಸರ್ಕಾರಿ ಕಚೇರಿಗಳು ಭ್ರಷ್ಟಾಚಾರದ ಕೂಪವಾಗಿವೆ. ಈ ಬಗ್ಗೆ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಗುವುದು. ಅ. 30ರ ನಂತರ ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಎಸ್.ಆರ್. ಪಾಟೀಲ್ ಅವರನ್ನು ಜಿಲ್ಲೆಗೆ ಕರೆಯಿಸಲಾಗುವುದು’ ಎಂದರು.
ಮುಖಂಡ ಬಾಗೂರು ಮಂಜೇಗೌಡ ಮಾತನಾಡಿ, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನುಹಾಸನ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ. ಕ್ಷೇತ್ರದಲ್ಲಿ ಪಕ್ಷಸಂಘಟನೆ ಮಾಡುತ್ತಿರುವುದು ಸತ್ಯ. ಆದರೆ, ಮಹೇಶ್ ಹಾಗೂ ನನ್ನ ನಡುವೆ ಯಾವುದೇ ಹೊಂದಾಣಿಕೆಯಾಗಿಲ್ಲ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಅವರು ಪರವಾಗಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ಎಚ್.ಕೆ.ಮಹೇಶ್, ರವಿಕುಮಾರ್, ಗಿರೀಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.