ಹಾಸನ: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬೂವನಹಳ್ಳಿ ಬೈಪಾಸ್ನ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ರೈತ ಸಂಘದ ನೂರಾರು ಕಾರ್ಯಕರ್ತರು ಬೂವನಹಳ್ಳಿ ಬೈಪಾಸ್ ವರೆಗೂ ಮೆರವಣಿಗೆಯಲ್ಲಿ ಬಂದು ಕೆಲ ಕಾಲ ಹೆದ್ದಾರಿ ಬಂದ್ ಮಾಡಿದರು.
ಈ ಹಿಂದೆ ಕೇಂದ್ರ ಸರ್ಕಾರ ಇದೇ ರೀತಿ ಭೂ ಸ್ವಾಧೀನ ಕಾಯ್ದೆ ಜಾರಿಗೊಳಿಸಲು ಮುಂದಾದಾಗ ಕೆಲ ರಾಜ್ಯಗಳು ವಿರೋಧಿಸಿದ್ದವು. ಈ ವಿಚಾರದಲ್ಲಿ ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ ಎಂದು ತಿಳಿಸಿದರು.
ಸ್ವಾಧೀನಪಡಿಸಿಕೊಂಡ ಜಮೀನು ಐದು ವರ್ಷದಲ್ಲಿ ಉದ್ದೇಶಿತ ಯೋಜನೆಗೆ ಬಳಕೆಯಾಗದಿದ್ದರೆ ರೈತರಿಗೆ ಜಮೀನು ಹಿಂದಿರುಗಿಸಬೇಕಿತ್ತು. ಆದರೆ, ರಾಜ್ಯದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಮ್ಮಿಶ್ರ ಸರ್ಕಾರ ಸದನದಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ಭೂ ಸ್ವಾಧೀನ ಮಸೂದೆ ಅಂಗೀಕರಿಸಿದೆ. ಅದರಲ್ಲಿ ರೈತರಿಗೆ ಸಮಸ್ಯೆಯಾಗುವಂತಹ ಸಾಕಷ್ಟು ಅಂಶಗಳಿವೆ. ರೈತರು ತಮ್ಮ ಹಕ್ಕು ಕಳೆದುಕೊಳ್ಳವರು. ಹಾಗಾಗಿ ಮಸೂದೆ ಜಾರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
‘ರೈತರನ್ನು ಒಕ್ಕಲೆಬ್ಬಿಸುವ ಹಾಗೂ ರಿಯಲ್ ಎಸ್ಟೇಟ್ ಕುಳಗಳಿಗೆ ಅನುಕೂಲ ಮಾಡಿಕೊಡಲು ಈ ಮಸೂದೆ ತರಲಾಗಿದೆ’ ಎಂದು ಆರೋಪಿಸಿದರು.
ಹೆದ್ದಾರಿ ಬಂದ್ನಿಂದ ಬೆಂಗಳೂರು -ಮಂಗಳೂರು ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರಸ್ತೆಯ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಆನೆಕೆರೆ ರವಿ, ಬಾಬು, ಅಂಗಡಿ ರಾಜಣ್ಣ, ಜಯರಾಮು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.