
ಸಚಿವ ಕೆ.ಎನ್. ರಾಜಣ್ಣ
ಸಕಲೇಶಪುರ (ಹಾಸನ): ‘2019 ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನೂ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಧುಗಿರಿ ಕ್ಷೇತ್ರದಲ್ಲಿ ಬಿಜೆಪಿಗೆ ಎರಡು ಸಾವಿರ ವೋಟೂ ಇರಲಿಲ್ಲ. ನಾನು ಅವರಿಗೆ 80 ಸಾವಿರ ಓಟು ಕೊಡಿಸಿದ್ದೆ. ಅದರಿಂದ ದೇವೇಗೌಡರು ಸೋತರು. ತುಮಕೂರಿನಲ್ಲಿ ನಡೆದ ಅನೇಕ ಸಭೆಗಳಲ್ಲಿ ಇದನ್ನೂ ಹೇಳಿದ್ದೇನೆ’ ಎಂದರು.
ಈ ಬಾರಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಈ ಬಾರಿ ನಾನು ಹಾಸನ ಜಿಲ್ಲಾ ಉಸ್ತುವಾರಿ. ಡಾ. ಪರಮೇಶ್ವರ್ ತುಮಕೂರಿನ ಸಚಿವರು. ನಾನು ಹಾಸನ ಜಿಲ್ಲೆಗೆ ಒತ್ತುಕೊಟ್ಟೆ. ತುಮಕೂರು ಚುನಾವಣೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನ ಮಧುಗಿರಿ ಕ್ಷೇತ್ರಕ್ಕೆ ಸೀಮಿತವಾಗಿದ್ದೆ’ ಎಂದರು.
‘ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಹಾಸನಕ್ಕೆ ಬರಲ್ಲ ಎಂದು ಹೇಳಿದ್ದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಹೆಚ್ಚಿನ ಮತ ಬರಲು ಸಾಧ್ಯವಾಗಿದೆ. ನಾನು ಗೆಲ್ಲಿಸಿದ್ದೇನೆ ಎಂದು ಹೇಳಿದರೆ, ಅದು ದುರಂಹಕಾರದ ಮಾತಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.