ADVERTISEMENT

ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ

ಚಾಕೇನಹಳ್ಳಿಯ ಜಿಲೆಟಿನ್ ಸ್ಫೋಟಗೊಂಡ ಸ್ಥಳಕ್ಕೆ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 4:13 IST
Last Updated 6 ಏಪ್ರಿಲ್ 2021, 4:13 IST
ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮೃತ ಕಾರ್ಮಿಕನ ಕುಟುಂಬದವರಿಗೆ ಸಾಂತ್ವನ ಹೇಳಿದರು
ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮೃತ ಕಾರ್ಮಿಕನ ಕುಟುಂಬದವರಿಗೆ ಸಾಂತ್ವನ ಹೇಳಿದರು   

ಹೊಳೆನರಸೀಪುರ: ಜಿಲ್ಲೆಯಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತಿದ್ದರೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ತಾಲ್ಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮಕ್ಕೆ ಸೋಮವಾರ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರಸುದ್ದಿಗಾರರ ಜತೆ ಮಾತನಾಡಿದರು.

‘ಸ್ಫೋಟಕ ವಸ್ತುಗಳನ್ನು ತಮಿಳುನಾಡಿನಿಂದ ತಂದು ಗೋದಾಮಿಗೆ ಇಳಿಸುವ ವೇಳೆ ದುರ್ಘಟನೆ ನಡೆದಿದೆ. ಪರವಾನಗಿ ಹೊಂದಿರುವ ದುರ್ಗಾಂಬ ಎಂಟರ್ ಪ್ರೈಸೆಸ್‌ ಮಾಲೀಕ ನಾಗೇಶ್ ತಪ್ಪು ಮಾಡಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ತನಿಖೆ ನಡೆಸಿ, ಶೀಘ್ರ ವರದಿ ಸಲ್ಲಿಸುವಂತೆ ಎಸ್ಪಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಅನುಮತಿ ಪಡೆದ 139 ಕಲ್ಲು ಗಣಿಕಾರಿಕೆಗೆ ಇದ್ದು, ಅಕ್ರಮವಾಗಿ ಗಣಿಕಾರಿಕೆಬಗ್ಗೆ ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ತಾಲ್ಲೂಕಿನ ಕಲ್ಲೊಡೆಬಾರೆ ಯಲ್ಲಿ ಅಕ್ರಮವಾಗಿ ಗಣಿಕಾರಿಕೆ ನಡೆಯುತ್ತಿದೆ.ಈ ಪೊಲೀಸರು ಮತ್ತು ತಹಶೀಲ್ದಾರ್ ವರದಿ ಸಲ್ಲಿಸಿದ್ದಾರೆ. ಅಧಿವೇಶನದಲ್ಲೂ ಪ್ರಸ್ತಾಪಿಸಿದ್ದೇನೆ. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪತ್ತೆ ಹಚ್ಚಲು ಡ್ರೋನ್ ಸರ್ವೆ ಮಾಡಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದರು.

ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ‘ಸ್ಫೋಟಕ ಸಾಮಗ್ರಿಗಳನ್ನು ಅನ್‌ಲೋಡ್‌ ಮಾಡುವಾಗ ಸರಿಯಾದ ಕ್ರಮ ಅನುಸರಿಸಿಲ್ಲ. ಹಾಗಾಗಿ ಅವಘಡ ಸಂಭವಿಸಿದೆ. ಗ್ರಾಮದ ಹತ್ತಿರವಿರುವ ಸ್ಫೋಟಕ ಸಂಗ್ರಹ ಗೋದಾಮುಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಸಲಹೆ ನೀಡಿದರು.

ಪೊಲೀಸ್ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ಗೌಡ ಮಾತನಾಡಿ, ‘ಸ್ಫೋಟಕ ಸಾಗಣೆ ವಾಹನದ ಚಾಲಕ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಕಾನೂನು ಉಲ್ಲಂಘನೆ ಮಾಡಿದ್ದಾರೆ. ಘಟನೆ ನಡೆದಾಗ ಲಾರಿ ಚಾಲಕ, ಭರತ್,ಗೋದಾಮು ಮೇಲ್ವಿಚಾರಕ ರವಿಕುಮಾರ್, ನಟರಾಜ್ ಮತ್ತು ಸಂಪತ್ ಇದ್ದರು. ಲಾರಿ ಬಲಭಾಗದಲ್ಲಿದ್ದ ಚಾಲಕ ಮತ್ತು ಭರತ್‍ಗೆ ಹಾನಿ ಆಗಿಲ್ಲ. ಆದರೆ ಎಡಭಾಗದಲ್ಲಿದ್ದ ಸಂಪತ್‌, ರವಿಕುಮಾರ್‌ ಮೃತಪಟ್ಟಿದ್ದಾರೆ. ನಟರಾಜು ಗಾಯಗೊಂಡಿದ್ದಾರೆ. ಎರಡು ದ್ವಿಚಕ್ರ ವಾಹನ ಕರಕಲಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಡಿವೈಎಸ್‌ಪಿ ಬಿ.ಬಿ.ಲಕ್ಷ್ಮೇಗೌಡ, ವೃತ್ತ ನಿರೀಕ್ಷಕ ಆರ್.ಪಿ.ಅಶೋಕ್, ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್, ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.