ADVERTISEMENT

ಕನಿಷ್ಠ ವೇತನ ₹21 ಸಾವಿರಕ್ಕೆ ಹೆಚ್ಚಿಸಿ

ಡಿಸಿ ಕಚೇರಿ ಎದುರು ಅಂಗನವಾಡಿ, ಬಿಸಿಯೂಟ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 14:48 IST
Last Updated 9 ನವೆಂಬರ್ 2020, 14:48 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರು ಧರಣಿ ನಡೆಸಿದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರು ಧರಣಿ ನಡೆಸಿದರು.   

ಹಾಸನ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಮತ್ತು ಬಿಸಿಯೂಟ
ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿ ಸಮಾವೇಶಗೊಂಡ ನೂರಾರು ಕಾರ್ಯಕರ್ತೆಯರು ಬಿ.ಎಂ.ರಸ್ತೆ, ಎನ್‌.ಆರ್‌ ವೃತ್ತದ ಮೂಲಕ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದು ಕೆಲ ಕಾಲ ಧರಣಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಅಂಗನವಾಡಿ ನೌಕರರಿಗೆ 21 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು ಮತ್ತು ಸೇವೆ ಕಾಯಂ ಮಾಡಬೇಕು. ₹ 10
ಸಾವಿರ ನಿವೃತ್ತಿ ವೇತನ ನೀಡಬೇಕು. 2020ರ ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿ ಹೆಚ್ಚುವರಿ ಕೆಲಸ ನಿರ್ಬಂಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ರಾಜ್ಯದಲ್ಲಿ ಈಗಾಗಲೇ ನಿವೃತ್ತಿಯಾದವರಿಗೆ ನಿವೃತ್ತಿ ವೇತನ ಘೋಷಣೆ ಮಾಡಿ ಎನ್‌ಪಿಎಸ್‌ ಲೈಟ್‌ ವಂತಿಗೆಯನ್ನು ಶೇಕಡಾ 10ರಷ್ಟು ಏರಿಸಬೇಕು. ಎಲ್ಲರಿಗೂ ಪಿಂಚಣಿ ಒದಗಿಸಿ, ಎನ್‌ಪಿಎಸ್‌ ಅನ್ನು ರದ್ದು ಮಾಡಿ ಹಿಂದಿನ ಪಿಂಚಣಿ ಯೋಜನೆಯನ್ನು ಪುನರ್‌ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ ಮಾತನಾಡಿ, ಸೇವಾ ಜೇಷ್ಠತೆ ಆಧಾರದಲ್ಲಿ ವೇತನ ನಿಗದಿ ಪಡಿಸಬೇಕು. ಕೋವಿಡ್‌ನಿಂದ ಮೃತರಾದ 26 ಜನ ಮತ್ತು ಕೆಲಸದ ಒತ್ತಡದಿಂದ ಮೃತರಾದ ಅಂಗನವಾಡಿ
ನೌಕರರ ಮಕ್ಕಳಿಗೆ ನೇಮಕಾತಿ ನಿಯಮ ಸಡಿಲಿಸಿ ಅನುಕಂಪದ ಆಧಾರದ ಮೇಲೆ ಕೆಲಸ ನೀಡಬೇಕು. ಕೋವಿಡ್‌ನಿಂದ
ಮೃತಪಟ್ಟ 32 ಜನ ಅಂಗನವಾಡಿ ನೌಕರರಿಗೆ ಕನಿಷ್ಠ ₹5 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇಲಾಖೆಯಿಂದಲೇ ಅಂಗನವಾಡಿಗಳಿಗೆ ಕೋಳಿ ಮೊಟ್ಟೆ ಸರಬರಾಜು ಮಾಡಬೇಕು. ಐಸಿಡಿಎಸ್‌ಗೆ ಕಡಿತವಾಗಿರುವ
ಅನುದಾನ ವಾಪಸ್‌ ನೀಡಬೇಕು. ಲಾಕ್‌ಡೌನ್‌ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆದಾಯ ತೆರಿಗೆ ವ್ಯಾಪ್ತಿ ಹೊರಗಿರುವ ಕುಟುಂಬಕ್ಕೆ ₹7,500 ಸಹಾಯಧನ ನೀಡಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌, ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಅಧ್ಯಕ್ಷೆ ಇಂದ್ರಮ್ಮ, ಖಜಾಂಚಿ ಜಿ.ಪಿ.ಶೈಲಜಾ, ಉಪಾಧ್ಯಕ್ಷರಾದ ಕಾಮಾಕ್ಷಿ ರಾಜು, ಲತಾ, ಶಾರದ, ಕೆ.ಪಿ. ವಿಣಾ ಹಾಗೂ ಪದಾಧಿಕಾರಿಗಳಾದ ಸಾವಿತ್ರಿ, ಮೀನಾಕ್ಷಿ, ಪೂರ್ಣಿಮಾ, ಟಿ.ಎಚ್‌. ಜಯಂತಿ, ನಾಗಲಕ್ಷ್ಮಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್‌.ಆರ್‌. ನವೀನ್‌ ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.