ಹಾಸನ: ‘ಕೋವಿಡ್ ಲಸಿಕೆ ಪಡೆಯಲು ದಿನವಿಡಿ ಸಾಲಿನಲ್ಲಿ ನಿಂತರೂ ಲಸಿಕೆ ಸಿಗುತ್ತಿಲ್ಲ. ಹಾಗಾಗಿ ಜಿಲ್ಲೆಗೆ ಅಗತ್ಯ ಇರುವಷ್ಟು ಲಸಿಕೆ ಪೂರೈಕೆ ಮಾಡಬೇಕು’ ಎಂದು ಆಗ್ರಹಿಸಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾ ನ್ಯಾಯಾಲಯ ಹಳೆ ಕಟ್ಟದಲ್ಲಿ ಕೋವಿಡ್ ಲಸಿಕೆ ನೀಡುತ್ತಿದ್ದು, ಬೆಳಿಗ್ಗೆಯಿಂದ ಸಾಲಿನಲ್ಲಿ ನಿಂತರು ಲಸಿಕೆ ಖಾಲಿ ಎಂದು ಹೇಳಿದ ಕಾರಣ ಸಾರ್ವಜನಿಕರು ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದರು.
ಈ ವೇಳೆ ಸುರೇಶ್ ಸುದ್ದಿಗಾರ ರೊಂದಿಗೆ ಮಾತನಾಡಿ, ‘ಕೋವಿಡ್ 3ನೇ ಅಲೆ ಬರಲಿದೆ ಎಂದು ಭಯ ಪಡಿಸಿಎಲ್ಲರೂ ಲಸಿಕೆ ಪಡೆಯಿರಿ ಎಂದು ಹೇಳಲಾಗುತ್ತಿದೆ. ಆದರೆ ಅಗತ್ಯ ಇರುವಷ್ಟು ಪ್ರಮಾಣದಲ್ಲಿ ಲಸಿಕೆ ಲಭ್ಯವಿಲ್ಲ. ನಿತ್ಯ ಬಂದು ಸಾಲಿನಲ್ಲಿ ನಿಂತು ಕಾಯಲು ಆಗುತ್ತಿಲ್ಲ. ಸರ್ಕಾರಕ್ಕೆ ನಿಜವಾಗಿಯೂ ಕಾಳಜಿಇದ್ದರೆ ಮನೆ ಮನೆಗೆ ಹೋಗಿ ಲಸಿಕೆ ನೀಡಬೇಕು. ಅದನ್ನು ಬಿಟ್ಟು ಸಾಲಿನಲ್ಲಿ ನಿಂತರೂ ಲಸಿಕೆ ಇಲ್ಲ ಎಂದು ಕಳಿಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.
‘ಲಸಿಕೆಯನ್ನು ಆದಷ್ಟು ಬೇಗ ಮನೆ ಮನೆಗೆ ಕೊಡಿಸುವ ಕೆಲಸ ಆಗಬೇಕು. ಸರ್ಕಾರ ಒಂದು ಕಡೆ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುತ್ತಿದ್ದೇವೆ. ಅದಕ್ಕಾಗಿ ಇಂತಿಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎಂದು ಪ್ರಚಾರ ಪಡೆಯುತ್ತಿದೆ. ಮತ್ತೊಂದು ಕಡೆ ಸಾರ್ವಜನಿಕರು ಸರಿಯಾಗಿ ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಆದ್ದರಿಂದ ಕೋವಿಡ್ 3ನೇ ಅಲೆ ಬರುವ ವೇಳೆಗೆ ಎಲ್ಲರಿಗೂ ಲಸಿಕೆ ಸಿಗುವಂತಾಗಬೇಕು’ ಎಂದು ಆಗ್ರಹಿಸಿದರು.
‘ಪ್ರತಿ ವಾರ್ಡ್ಗಳಲ್ಲಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಲಸಿಕೆ ಸಿಗುವಂತಾಗಬೇಕು. ಇಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೇವೆ ಇನ್ನು ಎರಡ್ಮೂರು ದಿನದಲ್ಲಿ ಲಸಿಕೆ ಲಭ್ಯವಾಗಲಿಲ್ಲ ಎಂದರೆ ಜಿಲ್ಲೆಯ ಜನರೆಲ್ಲಾ ಸೇರಿ ದೊಡ್ಡ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಎಚ್ಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.