ಹಾಸನ: ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಎಲ್ಲಾ ಸಾಮಾಜಿಕ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದರು.
ರೆಡ್ ಕ್ರಾಸ್ ಸಂಸ್ಥೆ ಪದಾಧಿಕಾರಿಗಳೊಂದಿಗೆ ಸಂಸ್ಥೆಯ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದ ಅವರು, ರೆಡ್ ಕ್ರಾಸ್ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಸಾಮಾಜಿಕ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದ್ದು, ಜಲಶಕ್ತಿ ಅಭಿಯಾನವು ಆಂದೋಲನದ ರೀತಿ ಕಾರ್ಯರೂಪಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಮುಖವಾಗಿ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಜಲ ಸಂರಕ್ಷಣೆ ಬಗ್ಗೆ ಸಾರ್ವಜನಿರಲ್ಲಿ ಅರಿವು ಮೂಡಿಸಲು ರೆಡ್ ಕ್ರಾಸ್ ಹಾಗೂ ವಿವಿಧ ಸಂಘ, ಸಂಸ್ಥೆಗಳು ಪಾಲ್ಗೊಂಡು ಸಹಕರಿಸಬೇಕು ಎಂದರು.
ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹನಿ ನೀರಿನ ಮಹತ್ವದ ಬಗ್ಗೆ ಹಾಗೂ ನಿರುಪಯುಕ್ತ ನೀರನ್ನೂ ಮರು ಬಳಕೆ ವಿಧಾನಗಳ ಬಗ್ಗೆ ಅರಿವು ಮೂಡಿಸಬೇಕು. ಇದರಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ನುಡಿದರು.
ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ. ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ನಿಷೇಧ ಹೇರಲಾಗಿದೆ. ಜೊತೆಗೆ ಹೂ ಗುಚ್ಚಗಳ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸದಂತೆ ತಿಳಿಸಲಾಗಿದ್ದು, ಆದೇಶ ಉಲ್ಲಂಘಿಸಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎಚ್.ಪಿ ಮೋಹನ್, ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ , ಸ್ವಾತಂತ್ರ ಹೋರಾಟಗಾರ ಎಚ್.ಎಂ ಶಿವಣ್ಣ, ಪತ್ರಿಕೋದ್ಯಮಿ ಮಂಜುನಾಥ್ ದತ್ತ, ಅಂಜಾದ್ ಖಾನ್, ಎಸ್.ಎಸ್ ಪಾಷಾ, ಶಬೀರ್ ಅಹಮದ್, ನಿರ್ಮಲಾ, ಚಂದನ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.