
ಸಕಲೇಶಪುರ: ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ಜ. 16ರಂದು ಜನಸ್ಪಂದನ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಸಚಿವರ ಜನಸ್ಪಂದನ ಸಭೆ ಸಂಬಂಧ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಸಮ್ಮುಖದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಲ್ಲೂಕು ಮಟ್ಟದ ಜನಸ್ಪಂದನ ಸಭೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಖುದ್ದು ಮನವಿ ಮಾಡಿದ್ದೆ. ಅದಕ್ಕೆ ಸಚಿವರು ಸ್ಪಂದಿಸಿ ಕೂಡಲೇ ಜಿಲ್ಲಾಧಿಕಾರಿಗಳಿಗೆ ಸಭೆಯ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರು. ತಾಲ್ಲೂಕಿನಲ್ಲಿ ಕಂದಾಯ, ಸರ್ವೆ ಇಲಾಖೆಗೆ ಸಂಬಂಧಿಸಿದ ಹೆಚ್ಚು ಸಮಸ್ಯೆಗಳು ಇವೆ. ಕೃಷ್ಣಬೈರೇಗೌಡರು ಕಂದಾಯ ಸಚಿವರೂ ಆಗಿರುವುದರಿಂದ ಅವರು ಸಭೆ ನಡೆಸಿದರೆ ಸಾಕಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಲೂರು–ಕಟ್ಟಾಯ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮೂರು ತಾಲ್ಲೂಕುಗಳ ಅಧಿಕಾರಿಗಳು ಈ ಜನಸ್ಪಂದನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕ್ಷೇತ್ರದ ಪ್ರತಿಯೊಬ್ಬರಿಗೂ ತಮ್ಮ ಅಹವಾಲು ಸಚಿವರ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಜನಸ್ಪಂದನ ಸಭೆಯಲ್ಲಿ ಸಚಿವರ ಗಮಕ್ಕೆ ಮನವಿ ಸಲ್ಲಿಸುವವರಿಗೆ ಬೆ.9ರಿಂದ ನೋಂದಣಿ ಪ್ರಾರಂಭ ಆಗುತ್ತದೆ. ಬೆ. 11 ರಿಂದ ಸಚಿವರು ಮನವಿ ಸ್ವೀಕರಿಸುತ್ತಾರೆ. ಬಂದಂತಹ ಎಲ್ಲ ಅರ್ಜಿಗಳ ವಿಲೆವಾರಿ ಆಗುವವವರೆಗೂ ಸಚಿವರು ಇರುತ್ತಾರೆ ಎಂದರು.
ಉಪವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ಕೆ.ಎಸ್. ಸುಪ್ರೀತಾ, ಡಿವೈಎಸ್ಪಿ ಮಹಂತೇಶ್, ಇನ್ಸ್ಪೆಕ್ಟರ್ಗಳಾದ ವನರಾಜು, ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ, ಪಿಡಬ್ಲ್ಯುಡಿ ಎಇಇ ಮುರುಗೇಶ್, ವಲಯ ಅರಣ್ಯ ಅಧಿಕಾರಿ ಎಚ್.ಆರ್. ಹೇಮಂತ್ಕುಮಾರ್, ಟಿಎಚ್ಒ ಡಾ.ಎಂ.ಎಸ್. ಮಹೇಶ್ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.