ಜಾವಗಲ್: ‘ಶಿಕ್ಷಣ ಮತ್ತು ಸಂಸ್ಕಾರ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು’ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಿ.ಪರಮೇಶ್ ತಿಳಿಸಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶನಿವಾರ ನಡೆದ ಶೈಕ್ಷಣಿಕ ವರ್ಷದ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.
‘ಶಿಕ್ಷಣ ಎಂದರೆ ಪುಸ್ತಕಗಳ ಅಧ್ಯಯನಕ್ಕೆ ಮಾತ್ರ ಸೀಮಿತವಾಗಿರದೆ ಅದು ಜನಪದ ಕಲೆ, ಸಾಹಿತ್ಯ, ಕಥೆ, ಕಾದಂಬರಿ.. ಹೀಗೆ ಮೊದಲಾದ ಸಾಂಸ್ಕೃತಿಕ ಚಟುವಟಿಕೆಗಳನ್ನು ಒಳಗೊಂಡಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಪ್ರಾಂಶುಪಾಲ ಉಮೇಶ್ ಹೊಸಹಳ್ಳಿ ಮಾತನಾಡಿ, ‘ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಲ್ಲಿ ದೊರೆಯುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಎಲ್ಲರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳಬೇಕು’ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮೋಹನ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಜಗನ್ನಾಥ್, ರಾಜಶೇಖರಪ್ಪ, ಶಿವಶಂಕರ್, ಸತ್ಯನಾರಾಯಣ್, ಶಿವಕುಮಾರ್, ವಿಟಿಎಸ್ ನಾಗರಾಜ್, ಲೋಕೇಶ್, ಕುಸುಮಾ, ಪಾಪಣ್ಣ ಹಾಗೂ ಕಾಲೇಜಿನ ಉಪನ್ಯಾಸಕರಾದ ಮಹೇಶ್, ವಂದನಾ, ಮಂಜುನಾಥ್, ಶಿವರಾಜ್, ಚಿತ್ರಲೇಖಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.