ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದ್ದು, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವುದು ದೈವಾನುಗ್ರಹ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದರು.
ಮಾಜಿ ಶಾಸಕ ದಿವಂಗತ ಎಚ್ಎಸ್ ಪ್ರಕಾಶ್ ಅವರ ಸವಿನೆನಪು ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರಕ್ಕೆ ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
1994ರಲ್ಲಿ ಇದ್ದ ಪರಿಸ್ಥಿತಿ ಇದೀಗ ಉದ್ಭವವಾಗುತ್ತಿದೆ. 2023 ಕ್ಕೆ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ನಂಬರ್ ಒನ್ ಸ್ಥಾನದಲ್ಲಿದ್ದು ಎರಡನೇ ಸ್ಥಾನಕ್ಕೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡೆಸುತ್ತಿವೆ. ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂಬ ಮುನ್ಸೂಚನೆ ಅರಿತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ತಳಮಳ ಸೃಷ್ಟಿಯಾಗಿದೆ ಎಂದರು.
ಜೆಡಿಎಸ್ ಪಕ್ಷಕ್ಕೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಅವರನ್ನು ಸಮಾಧಾನಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಜೆಡಿಎಸ್ ಹುಟ್ಟಿಸಿದ ಮಕ್ಕಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ನಮ್ಮ ಮಕ್ಕಳು ಅಂತ ಹೇಳುತ್ತಿವೆ. ಇಂತಹ ಪರಿಸ್ಥಿತಿ ಆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಬಂದಿರುವುದು ಜೆಡಿಎಸ್ ಪಕ್ಷದ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಶಕ್ತಿ ಇಲ್ಲ. ಆದ್ದರಿಂದ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಮೊದಲು ಅವರು ತಮ್ಮ ಪಕ್ಷದಲ್ಲಿ ಇರುವಂತಹ ಭಿನ್ನಾಭಿಪ್ರಾಯದ ನಾಯಕರನ್ನು ಒಂದುಗೂಡಿಸುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ ಎಂದು ಟೀಕಿಸಿದರು.
ಜನರ ಸಮಸ್ಯೆಯನ್ನು ಆಲಿಸಬೇಕಾದ ಬಿಜೆಪಿ ಜನಸ್ಪಂದನ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಶಾಸಕರು ಡ್ಯಾನ್ಸ್ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ ಎಂದು ಹೇಳಿದರು.
ದೇವೇಗೌಡರು ನಾಯಕರನ್ನು ತಯಾರು ಮಾಡುವಂತಹ ಯಂತ್ರವಾಗಿದ್ದಾರೆ. ಹಾಸನ ಜಿಲ್ಲೆ ರಾಜಕೀಯ ಶಕ್ತಿ ಕೇಂದ್ರವಾಗಿದ್ದು, ಇಲ್ಲಿ ನಾನಾ ಪಕ್ಷಗಳ ಪರಿಚಯ ಆಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಯಾರು ಮಾಡಿದ್ದು ಯಾರು? ಜೆ.ಎಚ್. ಪಟೇಲ್ ಅವರನ್ನು ರಾಜಕೀಯಕ್ಕೆ ತಂದವರು ಯಾರು ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.