ADVERTISEMENT

ಕಾಯ್ದೆಗಳಿಗೆ ಸುಗ್ರಿವಾಜ್ಞೆ ಮೂಲಕ ಅನುಮೋದನೆ: ನಾಳೆ ಜೆಡಿಎಸ್‌ ಪ್ರತಿಭಟನೆ

ರೇವಣ್ಣ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 13:20 IST
Last Updated 12 ಆಗಸ್ಟ್ 2020, 13:20 IST
ಎಚ್.ಡಿ.ರೇವಣ್ಣ
ಎಚ್.ಡಿ.ರೇವಣ್ಣ   

ಹಾಸನ: ಎಪಿಎಂಸಿ ಕಾಯ್ದೆ, ಕಾರ್ಮಿಕರ ಕಾಯ್ದೆ ಹಾಗೂ ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.

ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಪಕ್ಷದ ಶಾಸಕರು, ಸಂಸದರು, ಮುಖಂಡರು ಹಾಗೂ ಕಾರ್ಯಕರ್ತರು ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತವಾಗಿ ಮೆರವಣಿಗೆ ನಡೆಸುವರು. ಮೂರು ಕಾಯ್ದೆಗಳಿಗೆ ಸುಗ್ರಿವಾಜ್ಞೆ ಮೂಲಕ ಅನುಮೋದನೆ ತರಲಾಗಿದೆ. ಸರ್ಕಾರ ಕೂಡಲೇ ಇದನ್ನು ವಾಪಸ್‌ ಪಡೆಯಬೇಕು. ಇದರಿಂದ ರೈತರಿಗೆ, ಕಾರ್ಮಿಕರಿಗೆ ತೊಂದರೆ ಆಗುತ್ತದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕೋವಿಡ್-19 ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಡ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದೆ. ಇದರಿಂದ ಕಾರ್ಪೊರೇಟ್‌ಕಂಪನಿಗಳಿಗೆ ಅನುಕೂಲವಾಗುತ್ತದೆ. ಸಾಧಕ, ಬಾಧಕ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದರು.

ADVERTISEMENT

ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಗಲಾಟೆ ನಡೆದಿಲ್ಲ. 15 ದಿನ ಮುಂಚೆ ಸಭೆ ನಡೆಸುವಂತೆ ಹೇಳಿದ್ದರೂ ಸ್ಪಂದಿಸಲಿಲ್ಲ. ಹತ್ತು ದಿನ ಮೊದಲೇ ನಾಲೆಗಳಿಗೆ ನೀರು ಬಿಟ್ಟಿದ್ದರೆ, 20 ಸಾವಿರ ಕ್ಯುಸೆಕ್‌ ನೀರು ಹೊರಗೆ ಬಿಡುವ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕುಡಿಯುವ ನೀರಿಗೆ ಸಭೆ ನಡೆಸುವ ಅವಶ್ಯಕತೆ ಇಲ್ಲ ಅಂತಾರೆ. ಆದರೆ, ನೀರು ಬಿಡಲಿಲ್ಲ. ಒತ್ತಾಯದಿಂದ ನೀರು ಬಿಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ರೈತರ ಬೆಳೆಗಳು ಹಾನಿಯಾಗಿವೆ. ಸಾಲ ಮಾಡಿ ರೈತರು ತೊಂದರೆಯಲ್ಲಿದ್ದಾರೆ. ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ, ಬೆಳೆ ನಷ್ಟ ವರದಿ ಸರ್ಕಾರಕ್ಕೆ ಸಲ್ಲಿಸಬೇಕು. ಕೂಡಲೇ ಪರಿಹಾರ ಬಿಡುಗಡೆ ಆಗುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.