
ಎಚ್.ಡಿ. ದೇವೇಗೌಡ
(ಪಿಟಿಐ ಚಿತ್ರ)
ಹಾಸನ: ಜೆಡಿಎಸ್ ಜಿಲ್ಲಾ ಘಟಕದಿಂದ ಡಿ. 29ರಂದು ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ ಎಂದು ಘಟಕದ ಅಧ್ಯಕ್ಷ ಕೆ.ಎಸ್ ಲಿಂಗೇಶ್ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 29 ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ. ಶಾಸಕರಾದ ಎಚ್.ಡಿ ರೇವಣ್ಣ , ಸ್ವರೂಪ್ ಪ್ರಕಾಶ್ , ಹಾಲಿ ಹಾಗೂ ಮಾಜಿ ಶಾಸಕರು ಜಿಲ್ಲಾ , ತಾಲ್ಲೂಕು, ಗ್ರಾಮ ಪಂಚಾಯಿತಿ ಸದಸ್ಯರು, ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಜಿಲ್ಲೆ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಪಕ್ಷಕ್ಕೆ ಶಕ್ತಿ ತುಂಬಲು ಕಾರ್ಯಕರ್ತರು, ಮುಖಂಡರನ್ನು ಹುರಿದುಂಬಿಸಲು ಪಕ್ಷದ ವರಿಷ್ಠ ದೇವೇಗೌಡರು ಮುಂದಾಗಿದ್ದಾರೆ ಎಂದರು.
ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದ್ದು ಇತ್ತೀಚೆಗೆ ಕಾಂಗ್ರೆಸ್ ನಾಯಕರು ಹಾಸನವನ್ನು ಗುರಿಯಾಗಿಸಿ ಬೃಹತ್ ಸಮಾವೇಶಗಳನ್ನು ಹಮ್ಮಿಕೊಂಡಿದ್ದರು. ಆದರೂ ದೇವೇಗೌಡ ಹಾಗೂ ರೇವಣ್ಣ ಅವರ ವರ್ಚಸ್ಸನ್ನು ಕುಗ್ಗಿಸಲು ಸಾಧ್ಯವಿಲ್ಲ. ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಜನವರಿಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಸಮಾವೇಶ ಆಯೋಜಿಸುವ ಚಿಂತನೆ ಇದೆ ಎಂದರು.
ವರಿಷ್ಠರ ತೀರ್ಮಾನಕ್ಕೆ ಬದ್ಧ: ಬಿಜೆಪಿ -ಜೆಡಿಎಸ್ ಮೈತ್ರಿಯಲ್ಲೇ ಮುಂದಿನ ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡರ ತೀರ್ಮಾನದಂತೆ ಮುನ್ನಡೆಯಲಿದ್ದೇವೆ ಎಂದು ಲಿಂಗೇಶ್ ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರ ಪಾಲಿಕೆ ಮಾಜಿ ಮೇಯರ್ ಗಿರೀಶ್ ಚನ್ನವೀರಪ್ಪ , ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಮಾಧ್ಯಮ ವಕ್ತಾರ ರಘು ಹೊಂಗೆರೆ, ಎಚ್ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸತೀಶ್ ಜೆಡಿಎಸ್ ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಮಂಜೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.