ಹಾಸನ: ಜಿಂದಾಲ್ ಕಂಪನಿಗೆ ಜಮೀನು ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರ ಬಳಿಯಿಂದ ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಬಂದ ಸದಸ್ಯರು, ಸ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
‘ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಹಸ್ತಾಂತರಿಸುವ ಮೂಲಕ ಭಾರೀ ಭ್ರಷ್ಟಾಚಾರ ನಡೆಸಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಖಾಸಗಿ ಕಂಪನಿಗೆ 3667 ಎಕರೆ ಜಾಗವನ್ನು ಕೊಡುವ ಕೆಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯದ ಸಂಪತ್ತನ್ನು ರಕ್ಷಿಸಬೇಕಾದ ಸರ್ಕಾರವೇ ಖನಿಜ ಸಂಪನ್ಮೂಲವಿರುವ ದೊಡ್ಡ ಪ್ರಮಾಣದ ಜಮೀನನ್ನು ಖಾಸಗಿ ಕಂಪನಿಗೆ ಪರಭಾರೆ ಮಾಡಲು ಹೊರಟಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ಕಡಿಮೆ ಮೊತ್ತಕ್ಕೆ ನಿಗದಿ ಮಾಡಿ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ’ ಎಂದು ಆರೋಪಿಸಿದರು.
‘ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಪ್ರಮುಖರು ವಿರೋಧ ವ್ಯಕ್ತಪಡಿಸಿದರೂ ಮುಖ್ಯಮಂತ್ರಿ ತಲೆ ಕೆಡಿಸಿಕೊಂಡಿಲ್ಲ. ಇದನ್ನು ನೋಡಿದರೇ ಅವರೇ ಖಾಸಗಿ ಕಂಪನಿಗಳೊಂದಿಗೆ ನೇರವಾಗಿ ಶಾಮೀಲಾಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ದೂರಿದರು.
ಕೂಡಲೇ ಮಾರಾಟದ ಉದ್ದೇಶವನ್ನು ಕೈಬಿಡಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಚ್.ಎನ್. ನಾಗೇಶ್, ಹಿರಿಯ ಮುಖಂಡ ಎಚ್.ಎಂ. ವಿಶ್ವನಾಥ್, ಚನ್ನಕೇಶವ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.