ಹಾಸನ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ದಾಕ್ಷಾಯಿಣಿ ಜಿ.ಕೆ. ಅವರು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂತ್ರಸ್ತರಿಗೆ ಸಾಂತ್ವನ ಹೇಳಿದ ಅವರು, ಕಂದಾಯ ಇಲಾಖೆಯಿಂದ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿ ಪರಿಹಾರದ ಚೆಕ್ ವಿತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಬೆಳೆ ಹಾನಿಯಾಗಿದೆ. ಇದರಿಂದ ಜಿಲ್ಲಾಡಳಿತ ಶೀಘ್ರವಾಗಿ ಪರಿಹಾರ ನೀಡಬೇಕು. ಸರ್ಕಾರದ ಸವಲತ್ತನ್ನು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಹಾಸನದ ಶ್ರೀನಗರದಲ್ಲಿ 1, ಪೆನ್ಷನ್ ಮೊಹಲ್ಲಾದಲ್ಲಿ 2, ತೇಜೂರಿನಲ್ಲಿ 2, ಕೋರಹಳ್ಳಿಯಲ್ಲಿ 1, ಅರೆಕಲ್ಲು ಹೊಸಳ್ಳಿಯಲ್ಲಿ 1, ಎಚ್.ಹರಳಹಳ್ಳಿಯಲ್ಲಿ 2, ಯರೇಹಳ್ಳಿಯಲ್ಲಿ 1, ರಾಗಿಮುದ್ದನಹಳ್ಳಿಯಲ್ಲಿ 1, ಎ.ಕಾಟಿಹಳ್ಳಿಯಲ್ಲಿ 1 ಸೇರಿದಂತೆ ಒಟ್ಟು ಹಾಸನ ತಾಲ್ಲೂಕು ವ್ಯಾಪ್ತಿಯಲ್ಲಿ 12 ಮನೆಗಳು ಹಾನಿಗೊಳಗಾಗಿದ್ದು, ಶೀಘ್ರವಾಗಿ ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿ ಪರಿಹಾರದ ಚೆಕ್ ವಿತರಿಸುವಂತೆ ತಿಳಿಸಿದರು.
ಗ್ರೇಡ್ 2 ತಹಶೀಲ್ದಾರ್ ಯು.ಎಂ. ಮೋಹನ್ ಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.