ಬೇಲೂರು: ಪಟ್ಟಣದಲ್ಲಿ ಶೇ 60ರಷ್ಟು ಕನ್ನಡ ಬಳಸದ ಅಂಗಡಿ, ಮುಂಗಟ್ಟುಗಳ ನಾಮಫಲಕಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ರಾಜ್ಯ ಸರ್ಕಾರದ ಆದೇಶದಂತೆ ಪ್ರತಿಯೊಂದು ವ್ಯಾಪಾರಿಕ ಸಂಸ್ಥೆ, ಹೋಟೆಲ್, ಶಾಲೆ, ಕಚೇರಿ ಹಾಗೂ ಜಾಹೀರಾತು ಫಲಕಗಳಲ್ಲಿ ಕನಿಷ್ಠ ಶೇ 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕೆಂಬ ನಿಯಮ ಜಾರಿಯಲ್ಲಿದ್ದರೂ ಪಟ್ಟಣದ ಅನೇಕ ಅಂಗಡಿ, ಪೆಟ್ರೋಲ್ ಬಂಕ್, ಹೋಟೆಲ್ ಹಾಗೂ ಶಾಲೆಗಳ ನಾಮಫಲಕಗಳಲ್ಲಿ ಕನ್ನಡದ ಬಳಕೆ ಕಾಣೆಯಾಗಿದೆ. ನವೆಂಬರ್ 1ರೊಳಗೆ ಕಡ್ಡಾಯವಾಗಿ ಶೇ 60ರಷ್ಟು ಕನ್ನಡ ಇರಬೇಕು. ಇಲ್ಲದಿದ್ದಲ್ಲಿ ಪುರಸಭೆ ಅಧಿಕಾರಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನೇರ ಹೋರಾಟ ಆರಂಭಿಸಲು ತಯಾರಾಗಿದೆ’ ಎಂದು ಎಚ್ಚರಿಕೆ ನೀಡಿದರು.
ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ನವೆಂಬರ್ 1, ಕನ್ನಡ ರಾಜ್ಯೋತ್ಸವದೊಳಗೆ ಎಲ್ಲಾ ನಾಮಫಲಕಗಳಲ್ಲಿ ಶೇ60ರಷ್ಟು ಕನ್ನಡ ಬಳಸದಿರುವುದು ಕಂಡು ಬಂದಲ್ಲಿ ಪುರಸಭೆ ವತಿಯಿಂದ ನಾಮಫಲಕಗಳನ್ನು ತೆರವುಗೊಳಿಸಲಾಗುವುದು’ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಮಾಳೆಗೆರೆ ತಾರಾನಾಥ್ , ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್, ಉಪಾಧ್ಯಕ್ಷ ಚಂದ್ರೇಗೌಡ, ಯುವ ಘಟಕದ ಅಧ್ಯಕ್ಷ ಮೋಹನ್ ಗೌಡ, ಕಪಾಲಿ ರಾಜಶೇಖರ್, ಗಂಗರಾಜು ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.