
ಹಾಸನ: ಕೆಎಂಎಫ್ ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಬೇಕು. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಹಾಗೂ ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್.ಡಿ. ರೇವಣ್ಣ ಆಗ್ರಹಿಸಿದರು.
ನಗರದ ಪ್ರವಾಸಿ ಸೋಮವಾರ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕಗಳಿಂದ ಜಿಲ್ಲೆಯಲ್ಲಿ ಸುಮಾರು 3 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಆಲೂಗಡ್ಡೆ ಬಿತ್ತನೆ ಮಾಡುತ್ತಿದ್ದರು. ಅಂಗಮಾರಿ ರೋಗಭೀತಿಯಿಂದ ಈಗ ಕೇವಲ 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆಲೂಗಡ್ಡೆ ಬಿತ್ತನೆ ಮಾಡಲಾಗುತ್ತಿದೆ. ಕೆಲ ವರ್ಷಗಳಿಂದ ವಾಣಿಜ್ಯ ಬೆಳೆಯಾಗಿ ರೈತರು ಮೆಕ್ಕೆಜೋಳವನ್ನು ಬೆಳೆಯುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಈ ಬಾರಿ ಸುಮಾರು 2.40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದೆ. ಆದರೆ ಕಳಪೆ ಬಿತ್ತನೆ ಬೀಜ ಹಾಗೂ ಮಳೆಯಿಂದ ಶೇ 50 ರಷ್ಟು ಮೆಕ್ಕೆಜೋಳ ನಷ್ಟವಾಗಿದ್ದು, ರೈತರು ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತ ಪರ ನಿಲ್ಲಬೇಕಾದ ಸರ್ಕಾರ ಖಾಸಗಿಯವರಿಗೆ ಅನುಕೂಲವಾಗುವ ರೀತಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಎಂಎಫ್ ವತಿಯಿಂದ ಖಾಸಗಿಯವರ ಬಳಿ 24 ಸಾವಿರ ಟನ್ ಜೋಳ ಖರೀದಿ ಮಾಡಿದ್ದಾರೆ. ಆದರೆ ರೈತರ ಬಳಿ ಕೇವಲ 10 ಸಾವಿರ ಟನ್ ಖರೀದಿ ಮಾಡಲು ಮುಂದಾಗಿದ್ದಾರೆ. ನಾನು ಕೆಎಂಎಫ್ ಅಧ್ಯಕ್ಷನಾಗಿದ್ದಾಗ ಖಾಸಗಿಯವರನ್ನು ಹತ್ತಿರ ಕೂಡ ಸುಳಿಯಲು ಬಿಟ್ಟಿರಲಿಲ್ಲ. ಖಾಸಗಿ ಪಶು ಆಹಾರ ಘಟಕಗಳನ್ನು ಮುಚ್ಚಿಸಿದ್ದೆ. ಆದರೆ ಇಂದು ಮಧ್ಯವರ್ತಿಗಳಿಂದ ಜೋಳ ಖರೀದಿ ಮಾಡಲಾಗುತ್ತಿದೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಹಕಾರಿ ಸಚಿವರಾಗಿರುವುದರಿಂದ ರೈತರಿಂದಲೇ ಮೆಕ್ಕೆಜೋಳ ಖರೀದಿ ಮಾಡಬೇಕು. ಜೊತೆಗೆ ಪಶು ಆಹಾರಕ್ಕೆ ಅಗತ್ಯವಿರುವ ವಸ್ತುಗಳನ್ನು ನೇರವಾಗಿ ರೈತರಿಂದಲೇ ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.
ಖಾಸಗಿಯವರು ತಿಂಗಳ ಹಿಂದೆಯೇ ರೈತರಿಂದ ₹ 1,500 ರಂತೆ ಖರೀದಿಸಿದ ಜೋಳವನ್ನು ಈಗ ₹3ಸಾವಿರ ಮಾರಾಟ ಮಾಡುತ್ತಿದ್ದಾರೆ. ರೈತರಿಗೆ ಇಷ್ಟೊಂದು ಸಮಸ್ಯೆ ಆಗುತ್ತಿರುವಾಗ ಕೃಷಿ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ರೇವಣ್ಣ, ಜಿಲ್ಲಾಧಿಕಾರಿ ನಿತ್ಯ ಕೇವಲ ಸಭೆ ಮಾಡುವುದರಲ್ಲೇ ಬ್ಯುಸಿಯಾಗಿದ್ದಾರೆ. ತಾಲ್ಲೂಕು ಕೇಂದ್ರದ ಯಾವ ಅಧಿಕಾರಿಗಳನ್ನು ಕೇಳಿದರೂ ಡಿಸಿ ಮೀಟಿಂಗ್ನಲ್ಲಿ ಇದ್ದೇನೆ ಎಂದು ಹೇಳುತ್ತಾರೆ. ಕೂಡಲೇ ಜಿಲ್ಲಾಧಿಕಾರಿ ಈ ಸಂಬಂಧ ಸಭೆ ನಡೆಸಿ, ಕೆಎಂಎಫ್ ರೈತರಿಂದಲೇ ಮೆಕ್ಕೆಜೋಳವನ್ನು ಸಂಪೂರ್ಣ ಖರೀದಿ ಮಾಡಬೇಕು ಎಂದು ಆದೇಶ ನೀಡಲಿ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.