ಹಾಸನ: ಸಾಮಾಜಿಕ ಕಾರ್ಯಕರ್ತ ಸಿ.ಎಸ್. ಕೃಷ್ಣಸ್ವಾಮಿ (92) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು.
ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಾಣಿಸಿಕೊಂಡಿದ್ದರಿಂದ ಗುರುವಾರವಷ್ಟೇ ಮಗಳು ಲಕ್ಷ್ಮಿ ಮನೆಗೆ ಕರೆದೊಯ್ಯಲಾಗಿತ್ತು.
ಪುತ್ರಿಯರಾದಲಕ್ಷ್ಮೀ, ವೀಣಾ ಇದ್ದಾರೆ. ಶನಿವಾರ ನಗರದ ಕೆ.ಆರ್.ಪುರಂ ನಲ್ಲಿರುವ ಸ್ವಗೃಹದಲ್ಲಿ ಸಾರ್ವಜನಿಕ ಅಂತಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬಿಟ್ಟಗೌಡನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ರಾಮಕೃಷ್ಣ ವಿದ್ಯಾಲಯ ಹಾಗೂ ಹೋಲಿ ಮದರ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಪ್ರಾಂಶುಪಾಲರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಸಿ.ಎಸ್. ಕೃಷ್ಣಸ್ವಾಮಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಹಿರಿಯ ನಾಗರಿಕರ ವೇದಿಕೆ ಮೂಲಕ ನಗರದ ಕೆರೆ, ಕಟ್ಟೆಗಳ ಸಂರಕ್ಷಣೆಗೆ ಹೋರಾಟ ರೂಪಿಸಿದ್ದರು. ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆ ಸಂಸ್ಥಾಪಕರಲ್ಲಿ ಒಬ್ಬರಾಗಿ ಸಂಸ್ಥೆಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲಾ ಬ್ರಾಹ್ಮಣ ಸಂಘ, ಗಾಯತ್ರಿ ಪತ್ತಿನ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಉತ್ತಮ ಆಡಳಿತಗಾರರಾಗಿ ಹೆಸರು ಪಡೆದಿದ್ದರು. ಪಿಟಿಐ ಸುದ್ದಿ ಸಂಸ್ಥೆಯ ಹಿರಿಯ ವರದಿಗಾರರಾಗಿಯೂ ಕೆಲಸ ಮಾಡಿದ್ದಾರೆ. ನೆರವು ಕೋರಿ ಯಾರೇ ಬಂದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದ ಸಾತ್ವಿಕ ಸ್ವಭಾವದ ವ್ಯಕ್ತಿ ಅವರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.