ADVERTISEMENT

ಹಾಸನ: ದೋಣಿಗಾಲ್‌ ಬಳಿ ಮತ್ತೆ ಭೂಕುಸಿತ, ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 7:30 IST
Last Updated 14 ಜುಲೈ 2022, 7:30 IST
ದೋಣಿಗಾಲ್‌ ಬಳಿ ಭೂಕುಸಿತ ಉಂಟಾಗಿದೆ.
ದೋಣಿಗಾಲ್‌ ಬಳಿ ಭೂಕುಸಿತ ಉಂಟಾಗಿದೆ.   

ಹಾಸನ: ಸಕಲೇಶಪುರ ತಾಲ್ಲೂಕಿನ ದೋಣಿಗಾಲ್‌ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಕೆಳಭಾಗದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಮತ್ತೆ ಭೂಕುಸಿತ ಉಂಟಾಗಿದ್ದು, ಗುಂಡ್ಯದಿಂದ ಆಲೂರುವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್‌ ಭಾಯಲ್‌, ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ಪ್ರಯಾಣಿಕ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿದೆ ಎಂದರು.

ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದು, ಮಣ್ಣಿನ ಸಂರಚನೆಯಿಂದಾಗಿ ಈ ಸ್ಥಳವನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಕಳೆದ ವರ್ಷವೂ ಇಲ್ಲಿ ಭೂಕುಸಿತ ಉಂಟಾಗಿತ್ತು. ಈ ಬಾರಿಯೂ ಮಳೆ ಸುರಿಯುತ್ತಿರುವುದರಿಂದ ಮೇಲ್ಭಾಗದಿಂದ ನೀರು ಹರಿದು ಬರುತ್ತಿದೆ. ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಭೂಕುಸಿತ ಉಂಟಾಗುತ್ತಿದೆ ಎಂದು ತಿಳಿಸಿದರು.

ಎಲ್ಲ ರೀತಿಯ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ಈ ಪ್ರದೇಶದಲ್ಲಿ ನಿರ್ಬಂಧಿಸಲಾಗಿದೆ. ಅಲ್ಲದೇ ಈ ಸ್ಥಳದಲ್ಲಿ ಚೆಕ್‌ಪೋಸ್ಟ್‌ ಮಾದರಿಯಲ್ಲಿ ಪೊಲೀಸರು, ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಭೂಕುಸಿತ ಆಗುತ್ತಿರುವ ಸ್ಥಳದಲ್ಲಿ ಏಕಮುಖ ಸಂಚಾರ ಇರಲಿದೆ. ಒಂದು ಬದಿಯ ವಾಹನಗಳು ಸಾಗಿದ ನಂತರ ಇನ್ನೊಂದು ಬದಿಯ ವಾಹನಗಳು ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದು ಸೂಕ್ಷ್ಮ ಪ್ರದೇಶವಾಗಿದ್ದು, ತಜ್ಞರ ಸಮಿತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ. ಸಮಿತಿ ವರದಿ ನೀಡುವವರೆಗೆ ಈ ಸ್ಥಳದಲ್ಲಿ ಸಂಚಾರವನ್ನು ನಿಯಂತ್ರಿಸುವುದು ಅಗತ್ಯವಾಗಿದೆ ಎಂದ ಅವರು, ಭೂಕುಸಿತದಿಂದಾಗಿ ಇದುವರೆಗೆ ಯಾವುದೇ ಜೀವ, ಆಸ್ತಿ ಹಾನಿ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಾಲ್ಕೈದು ದಿನಗಳ ಹಿಂದಷ್ಟೇ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಯಾವುದೇ ಕಾರಣಕ್ಕೂ ವಾಹನ ಸಂಚಾರ ಬಂದ್‌ ಮಾಡುವುದಿಲ್ಲ ಎಂದು ಹೇಳಿದ್ದರು. ಇದೀಗ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ.

ಕಳೆದ ವ‌ರ್ಷವೂ ಇದೇ ಸ್ಥಳದಲ್ಲಿ ಭೂಕುಸಿತ ಉಂಟಾಗಿತ್ತು. ಶಾಶ್ವತ ತಡೆಗೋಡೆ ನಿರ್ಮಾಣ ಮಾಡದ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಇದೀಗ ಮತ್ತೊಮ್ಮೆ ಭೂಕುಸಿತ ಆಗಿದೆ. ಇದರಿಂದ ವಾಹನ ಸಂಚಾರ ಸ್ಥಗಿತ ಆಗುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.