ADVERTISEMENT

ಹಾಸನ | ಕುಷ್ಠರೋಗ ಮುಕ್ತ ಜಿಲ್ಲೆಗೆ ಆಂದೋಲನ: ಬಿ.ಆರ್. ಪೂರ್ಣಿಮಾ

ಜಿಲ್ಲೆಯಲ್ಲಿ ಅತೀ ಕಡಿಮೆ ಪ್ರಕರಣ: ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 3:11 IST
Last Updated 22 ನವೆಂಬರ್ 2025, 3:11 IST
ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನದ ಆರೋಗ್ಯ ಶಿಕ್ಷಣ ಮತ್ತು ಸಂವಹನದ ಪರಿಕರಗಳನ್ನು ಶುಕ್ರವಾರ ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ ಬಿಡುಗಡೆ ಮಾಡಿದರು
ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನದ ಆರೋಗ್ಯ ಶಿಕ್ಷಣ ಮತ್ತು ಸಂವಹನದ ಪರಿಕರಗಳನ್ನು ಶುಕ್ರವಾರ ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ ಬಿಡುಗಡೆ ಮಾಡಿದರು   

ಹಾಸನ: ರಾಜ್ಯದಲ್ಲಿ ಅತೀ ಕಡಿಮೆ ಕುಷ್ಠರೋಗ ಹೊಂದಿರುವ ಜಿಲ್ಲೆಗಳಲ್ಲಿ ಹಾಸನವೂ ಒಂದಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದರು.

ಜಿಲ್ಲೆಯಾದ್ಯಂತ ನ.24 ರಿಂದ ಡಿ.9 ರವರೆಗೆ ಆಯ್ದ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ 2025-26 ಆಂದೋಲನದ ಆರೋಗ್ಯ ಶಿಕ್ಷಣ ಮತ್ತು ಸಂವಹನದ (ಐಇಸಿ) ಪರಿಕರಗಳನ್ನು ಶುಕ್ರವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅತೀ ಕಡಿಮೆ ಕುಷ್ಠರೋಗ ಪ್ರಕರಣಗಳಿದ್ದು, 2025-26ನೇ ಸಾಲಿನಲ್ಲಿ ಕೇವಲ 6 ಪ್ರಕರಣ ಪತ್ತೆಯಾಗಿವೆ. ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

ಕುಷ್ಠರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ರೋಗದಿಂದಾಗುವ ಅಂಗವೈಕಲ್ಯಗಳನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಬೇರೆಯವರಿಗೆ ಹರಡುವುದನ್ನೂ ತಡೆಗಟ್ಟಬಹುದಾಗಿದೆ ಎಂದರು.

ಈ ಆಂದೋಲನದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಪುರುಷ ಸ್ವಯಂಸೇವಕರು, ತಾಲ್ಲೂಕು ಮೇಲ್ವಿಚಾರಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಮೇಲ್ವಿಚಾರಕರು ಮತ್ತು ವೈದ್ಯಾಧಿಕಾರಿಗಳು ಭಾಗವಹಿಸುವರು. ಅವಶ್ಯವಿರುವ ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳನ್ನೂ ಬಳಸಿಕೊಳ್ಳಲಾಗುತ್ತಿದೆ. ಈ ದಿನಗಳಲ್ಲಿ ಮನೆಗಳಿಗೆ ಭೇಟಿ ನೀಡುವ ಇಲಾಖೆ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಜನರಿಗೆ ಮನವಿ ಮಾಡಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಶಿವಶಂಕರ್ ಕೆ.ಬಿ., ಆರೋಗ್ಯ ನಿರೀಕ್ಷಕ ಅಪ್ಪಾಜಿಗೌಡ, ಜಿಲ್ಲಾ ಕಾರ್ಯಕ್ರಮ ಸಹಾಯಕ ವೆಂಕಟೇಶ್ ಬಿ.ಎಸ್. ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಕೇವಲ 3 ಪ್ರಕರಣ ಪತ್ತೆ ಈ ವರ್ಷ ಪತ್ತೆಯಾದ 6 ಕುಷ್ಠರೋಗ ಪ್ರಕರಣಗಳಲ್ಲಿ 3 ಪ್ರಕರಣಗಳು ಹೊರ ರಾಜ್ಯದ್ದಾಗಿದ್ದು ಉಳಿದ 3 ಪ್ರಕರಣಗಳು ಮಾತ್ರ ಜಿಲ್ಲೆಯದ್ದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ ಹೇಳಿದರು. 5 ವರ್ಷಗಳಲ್ಲಿ ಕುಷ್ಠರೋಗ ಪತ್ತೆಯಾಗಿದ್ದ ಊರುಗಳಲ್ಲಿ ಸಮೀಕ್ಷಾ ತಂಡವು ಮನೆ-ಮನೆಗೆ ಭೇಟಿ ನೀಡಿ ಕುಷ್ಠರೋಗದ ಚಿನ್ಹೆ ಇರುವ ವ್ಯಕ್ತಿಗಳನ್ನು ಗುರುತಿಸಿ ಸಂಭಾವ್ಯ ಕುಷ್ಠರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಕುಷ್ಠರೋಗ ಕಂಡು ಬಂದಲ್ಲಿ ಅಂತಹ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು ಆಂದೋಲನದ ಉದ್ದೇಶ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.