ADVERTISEMENT

ವ್ಯಕ್ತಿತ್ವಕ್ಕೆ ಸಾಹಿತ್ಯ, ಕ್ರೀಡೆ ಮೆರಗು ನೀಡುತ್ತದೆ: ಶಾಸಕ ಸಿ.ಎನ್. ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 15:10 IST
Last Updated 4 ಜೂನ್ 2025, 15:10 IST
ಚನ್ನರಾಯಪಟ್ಟಣದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಶಾಸಕ ಸಿ.ಎನ್. ಬಾಲಕೃಷ್ಣ ಸನ್ಮಾನಿಸಿದರು. ಎಂ.ಬಿ. ಇರ್ಷಾದ್, ಎಸ್.ಎಚ್. ಗಂಗೇಗೌಡ ಭಾಗವಹಿಸಿದ್ದರು
ಚನ್ನರಾಯಪಟ್ಟಣದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಶಾಸಕ ಸಿ.ಎನ್. ಬಾಲಕೃಷ್ಣ ಸನ್ಮಾನಿಸಿದರು. ಎಂ.ಬಿ. ಇರ್ಷಾದ್, ಎಸ್.ಎಚ್. ಗಂಗೇಗೌಡ ಭಾಗವಹಿಸಿದ್ದರು   

ಚನ್ನರಾಯಪಟ್ಟಣ: ವ್ಯಕ್ತಿತ್ವಕ್ಕೆ ಸಾಹಿತ್ಯ, ಕಲೆ ಮತ್ತು ಕ್ರೀಡೆ ಮೆರಗು ನೀಡುತ್ತದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಂಗೀತ, ಸಾಹಿತ್ಯ, ಕಲೆ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಕಲೆ ಆರಾಧಕನ ಸ್ವತ್ತು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಭಾರತ ಹೆಚ್ಚು ಪ್ರಮಾಣದಲ್ಲಿ ಮಾನವಸಂಪನ್ಮೂಲ ಶಕ್ತಿಯನ್ನು ಹೊಂದಿದೆ. ಯುವ ಶಕ್ತಿ ದೇಶದ ಶಕ್ತಿ. ಶಿಕ್ಷಣ, ಆರ್ಥಿಕ, ವಿಜ್ಞಾನ, ತಂತ್ರಜ್ಞಾನ ಐ.ಟಿ, ಬಿ.ಟಿ ಸೇರಿ ಹಲವು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದೆ. ಉತ್ತಮ ನಡವಳಿಕೆಗಳು ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತವೆ. ವಿದ್ಯಾರ್ಥಿಗಳು ಪುಸ್ತಕ, ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕು ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.

ADVERTISEMENT

ಸಾಮರಸ್ಯ, ಸಹಬಾಳ್ವೆಯ ಮೂಲಕ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದ ಅವರು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನಿಂದ ಬಿಸಿಎ ಕೋರ್ಸ್ ಆರಂಭಿಸಲಾಗಿದ್ದು, ಈಗಾಗಲೇ ಪ್ರವೇಶಾತಿ ಪ್ರಾರಂಭವಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಬಸ್ ಸೌಕರ್ಯ ಒದಗಿಸಲಾಗಿದೆ ಎಂದು ಹೇಳಿದರು.

ಹಾಸನ ಸರ್ಕಾರಿ ಕಲಾ, ವಾಣಿಜ್ಯ, ಸ್ನಾತಕೋತ್ತರ ಕಾಲೇಜಿನ ಪ್ರಾಂಶುಪಾಲ ಎಂ.ಬಿ. ಇರ್ಷಾದ್ ಮಾತನಾಡಿ, ಶಿಕ್ಷಣ ಪಡೆಯುವುದರ ಜತೆ ಕೌಶಲ ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಪರಿವರ್ತನೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ. ಪ್ರತಿಭೆಯ ಮೂಲಕ ಬದುಕು ರೂಪಿಸಿಕೊಳ್ಳಬಹುದು. ಸಾಧನೆ ಮಾಡುವ ಛಲ,ಆತ್ಮಸೈರ್ಯದ ಮೂಲಕ ಉತ್ತಮಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.

ಕಾಲೇಜು ಪ್ರಾಂಶುಪಾಲ ಎಸ್.ಎಚ್. ಗಂಗೇಗೌಡ ಮಾತನಾಡಿದರು. ಪುರಸಭಾಧ್ಯಕ್ಷ ಸಿ.ಎಸ್. ಮೋಹನ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಆರ್. ಅನಿಲ್‍ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ವೆಂಕಟೇಶ್, ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಜೆ.ಎಸ್. ಗುರುರಾಜ್, ಎನ್‌ಎಸ್‌ಎಸ್ ಅಧಿಕಾರಿಗಳಾದ ಬಿ.ಎಸ್. ಪೂರ್ಣಿಮಾ, ಕೆ.ಟಿ. ಶಿವಕುಮಾರ್, ಐಕ್ಯುಎಸಿ ಸಂಚಾಲಕ ವಾಸುದೇವ್ ಪ್ರಸಾದ್, ರೆಡ್ ಕ್ರಾಸ್, ರೆಡ್ ರಿಬ್ಬನ್ ಘಟಕದ ಸಂಚಾಲಕಿ ಟಿ.ಪಿ. ರೂಪಾ, ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿ ಕೆ.ಎಸ್. ಅಜಯ್‍ಕುಮಾರ್, ದೈಹಿಕಶಿಕ್ಷಣ ನಿರ್ದೇಶಕ ಸಿ. ಪ್ರಕಾಶ್‍ಕುಮಾರ್ ಭಾಗವಹಿಸಿದ್ದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.