ADVERTISEMENT

‌ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಿ

ಬೇಡಿಕೆ ಈಡೇರಿಕೆಗಾಗಿ ಅಂಗನವಾಡಿ ನೌಕರರ ಪ್ರತಿಭಟನೆ‌

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 14:26 IST
Last Updated 10 ಜುಲೈ 2019, 14:26 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಸನ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಸನ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿದರು.   

ಹಾಸನ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದರು.

‌ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ನೂರಾರು ನೌಕರರು ತುಂತುರು ಮಳೆ ನಡುವೆಯೇ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹಲವರು ಮಳೆಯಿಂದ ರಕ್ಷಣೆ ಪಡೆಯಲು ಕೊಡೆ ಆಶ್ರಯಿಸಿದರು.

ಬಾಕಿ ಇರುವ ಗೌರವಧನ, ಕೋಳಿ ಮೊಟ್ಟೆ, ತರಕಾರಿ ಹಣದ ಬಿಡುಗಡೆಗಾಗಿ ಮತ್ತು ಕೇಂದ್ರ ಸರ್ಕಾರ ಕಳೆದ ಅಕ್ಟೋಬರ್‌ ತಿಂಗಳಲ್ಲಿ ಹೆಚ್ಚಳ ಮಾಡಿದ ಗೌರವ ಧನ ಬಿಡುಗಡೆ ಮಾಡಬೇಕು. ಈಗಿರುವ ನಿವೃತ್ತಿ ಸೌಲಭ್ಯವನ್ನು ಬದಲಾಯಿಸಿ ಎಲ್.ಐ.ಸಿ ಆಧಾರಿತ ಪಿಂಚಣಿ ನೀಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಕೊಡುವ ಎನ್.ಪಿ.ಎಸ್ ಮಾನದಂಡ ಅನುಸರಿಸಬೇಕು, ನಿವೃತ್ತಿಯಾದ ಕಾರ್ಯಕರ್ತೆ, ಸಹಾಯಕಿಗೆ ಇಡುಗಂಟು ತಕ್ಷಣ ಬಿಡುಗಡೆ ಆಗಬೇಕು ಎಂದು ಒತ್ತಾಯಿಸಿದರು.

ADVERTISEMENT

ಕಾರ್ಯಕರ್ತೆ, ಸಹಾಯಕಿಯರಿಗೆ ಪ್ಯಾನ್‌ ಕಾರ್ಡ್‌ ನೀಡಬೇಕು. 2016ರ ಏಪ್ರಿಲ್ ನಿಂದ ಆಯ್ಕೆಯಾದ ಕಾರ್ಯಕರ್ತೆ, ಸಹಾಯಕಿಯರಿಗೆ ಕಾಯಂ ನಿವೃತ್ತಿ ಸೌಲಭ್ಯದಡಿ ತರಬೇಕು.. ಈಗಾಗಲೇ ನಿವೃತ್ತಿ ಆದವರಿಗೆ ಕನಿಷ್ಠ ₹ 3 ಸಾವಿರ ಪಿಂಚಣಿ ನೀಡಬೇಕು. ಅಂಗನವಾಡಿ ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು. ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿಯನ್ನು ಕೊಡಬೇಕು. ಎಲ್‌ಕೆಜಿ, ಯುಕೆಜಿ ಪ್ರಾರಂಭಿಸದಂತೆ ತಡೆ ನೀಡಬೇಕು ಎಂದು ಆಗ್ರಹಿಸಿದರು.

ಸೇವಾ ಜೇಷ್ಠತೆ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು, ಶಿಫಾರಸ್ಸಿನ ಪ್ರಕಾರ ₹ 18 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು. ಹೊರ ರಾಜ್ಯಗಳಂತೆ ಕರ್ನಾಟಕದಲ್ಲೂ ಗೌರವಧನ ಹೆಚ್ಚಿಸಬೇಕು. ಮಾತೃಪೂರ್ಣ ಯೋಜನೆಯ ನಂತರ ಸಹಾಯಕಿಯರ ಕೆಲಸ ದುಪ್ಪಟ್ಟು ಆಗಿರುವುದರಿಂದ ಕಾರ್ಯಕರ್ತೆಯರಿಗೆ ನೀಡುವ ಗೌರವಧನದ ಶೇಕಡಾ 75 ಹೆಚ್ಚಿಸಬೇಕು ಎಂದರು.

ಅಂಗನವಾಡಿ ಸಹಾಯಕಿ ಕಾರ್ಯಕರ್ತೆಯಾಗಿ ಮುಂಬಡ್ತಿ ಪಡೆಯಲು ಇರುವ ವಯಸ್ಸಿನ ಮಿತಿ ಸಡಿಲಿಸಬೇಕು. ಖಾಲಿಯಿರುವ ಸಹಾಯಕಿ ಮತ್ತು ಕಾರ್ಯಕರ್ತೆಯರ ಹುದ್ದೆಗಳನ್ನು ತುಂಬಬೇಕು. ಹಲವು ಯೋಜನೆಗಳಿಗೆ ಡಿಡಿ, ಡಿಓ, ಸಿಡಿಪಿಓ, ಮೇಲ್ವಿಚಾರಕಿಯರನ್ನು ಕಾಯಂ ಆಗಿ ನೇಮಕ ಮಾಡಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಸ್ಸು ಆಗಬೇಕು. ಅಂಗನವಾಡಿ ನೌಕರರು ಇಲಾಖಾ ಕೆಲಸಗಳಿಗಾಗಿ ಓಡಾಡುವಾಗ ಆಗುವ ಅಪಘಾತಗಳಿಗೆ ಪರಿಹಾರ ನೀಡಬೇಕು. 5 ವರ್ಷ ಪೂರೈಸಿದ ಮೇಲ್ವಿಚಾರಕಿಯರನ್ನು ಕಡ್ಡಾಯ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುಷ್ಪಾ, ಖಜಾಂಚಿ ಶೈಲಜಾ, ನಾಗರತ್ನ, ನಾಗಲಕ್ಷ್ಮಿ, ಕೆ.ಪಿ.ವೀಣಾ, ಟಿ.ಎಚ್‌.ಜಯಂತಿ, ಶಾರದಾಂಬ, ಸಾವಿತ್ರಿ, ಇಂದ್ರಮ್ಮ , ಸಿಐಟಿಯುನ ಅರವಿಂದ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.