ಹಾಸನ: ಮಾಂಡಸ್ ಚಂಡಮಾರುತದಿಂದಾಗಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಶನಿವಾರ ರಾತ್ರಿಯಿಡೀ ಮಳೆ ಸುರಿದಿದ್ದು, ಭಾನುವಾರ ಬೆಳಿಗ್ಗೆಯಿಂದಲೂ ಜಿಟಿಜಿಟಿ ಮಳೆ ಮುಂದುವರಿದಿದೆ. ಇದರಿಂದಾಗಿ ಚಳಿಯು ಹೆಚ್ಚಾಗಿದ್ದು, ಜನರು ಮನೆಯಿಂದ ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು, ಚನ್ನರಾಯಪಟ್ಟಣ, ಅರಸೀಕೆರೆ, ಹೊಳೆನರಸೀಪುರ, ಬೇಲೂರು, ಹಾಸನ ಸೇರಿದಂತೆ ಬಹುತೇಕ ಎಲ್ಲ ತಾಲ್ಲೂಕುಗಳಲ್ಲೂ ಮಳೆಯ ಸುರಿಯುತ್ತಿದೆ.
ಭಾನುವಾರ ಆಗಿರುವುದರಿಂದ ಸರ್ಕಾರಿ, ಖಾಸಗಿ ಉದ್ಯೋಗಿಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು ಮನೆಯಿಂದ ಹೊರಬಂದಿಲ್ಲ. ಆದರೆ, ಮನೆಯಲ್ಲೂ ವಿಪರೀತ ಚಳಿ ಇದ್ದು, ಉಷ್ಣಾಂಶ ಗಣನೀಯವಾಗಿ ಕುಸಿದಿದೆ. ಇನ್ನೂ ಎರಡು ದಿನ ಇದೇ ರೀತಿ ಮಳೆ ಮುಂದುವರಿದಲ್ಲಿ ಕಾಫಿ, ಜೋಳ, ರಾಗಿ ಸೇರಿದಂತೆ ಇತರೆ ದ್ವಿದಳ ಧಾನ್ಯಗಳಿಗೆ ಮಾರಕ ಆಗಬಹುದು ಎನ್ನುವ ಆತಂಕ ರೈತರನ್ನು ಕಾಡುತ್ತಿದೆ.
ಮದುವೆ, ಬೀಗರ ಔತಣ, ಶುಭ ಸಮಾರಂಭಗಳು ಈಗಷ್ಟೇ ಆರಂಭವಾಗಿದ್ದು, ಈ ಕಾರ್ಯಕ್ರಮಗಳಿಗೆ ತೆರಳುವ ಜನರಿಗೂ ಮಳೆಯಿಂದ ತೊಂದರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ಇತರೆ ಕಾಮಗಾರಿಗಳಿಗೂ ತೊಡಕಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.