ADVERTISEMENT

ತಾಯಿ– ಮಗು ಆಸ್ಪತ್ರೆಗಾಗಿ ಮನವಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 4:13 IST
Last Updated 14 ಫೆಬ್ರುವರಿ 2026, 4:13 IST
ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗು ಆಸ್ಪತ್ರೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಸಿ.ಎನ್. ಬಾಲಕೃಷ್ಣ ಗುರುವಾರ ಮನವಿ ಮಾಡಿದರು
ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗು ಆಸ್ಪತ್ರೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಸಿ.ಎನ್. ಬಾಲಕೃಷ್ಣ ಗುರುವಾರ ಮನವಿ ಮಾಡಿದರು   

ಚನ್ನರಾಯಪಟ್ಟಣ: ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗು (ಎಂಸಿಎಚ್) ಆಸ್ಪತ್ರೆಯನ್ನು ಘೋಷಿಸುವಂತೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಮನವಿ ಸಲ್ಲಿಸಿದ್ದಾರೆ.

ಈ ಆಸ್ಪತ್ರೆ ಗಡಿಭಾಗದ ಮಂಡ್ಯ, ತುಮಕೂರು ಜಿಲ್ಲೆ ಸೇರಿ ಸುತ್ತಲಿನ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುತ್ತಿದೆ. ನಿತ್ಯ 1,000-1,200 ಹೊರರೋಗಿಗಳು ಚಿಕಿತ್ಸೆ ಪಡೆದರೆ, 70-80 ಜನ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ತಿಂಗಳಿಗೆ ಸರಾಸರಿ 80-90 ಹೆರಿಗೆಗಳು ನಡೆಯುತ್ತಿವೆ. ಅದೇ ರೀತಿ 20-30 ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಗಮನಕ್ಕೆ ತಂದರು.

ತಾಲ್ಲೂಕು 2.93 ಲಕ್ಷ ಜನಸಂಖ್ಯೆ ಹೊಂದಿದೆ. 93 ಉಪಕೇಂದ್ರಗಳು, 25 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 4 ಸಮುದಾಯ ಆರೋಗ್ಯ ಕೇಂದ್ರಗಳು ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಂದ ಹೆರಿಗೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಆದರೆ ಪಟ್ಟಣದಲ್ಲಿ ಎಂಸಿಎಚ್ ಆಸ್ಪತ್ರೆ ಇಲ್ಲ. ಜತೆಗೆ ಒಬ್ಬರೆ ಪ್ರಸೂತಿ ತಜ್ಞರು ಇರುವುದರಿಂದ ಕೆಲಸದ ಒತ್ತಡ ಮತ್ತು ಸ್ಥಳಾವಕಾಶದ ಕೊರತೆಯಿಂದ ಬಹುತೇಕರನ್ನು ಜಿಲ್ಲಾ ಆಸ್ಪತ್ರೆಗೆ ಕಳಹಿಸಲಾಗುತ್ತದೆ ಎಂದರು.

ADVERTISEMENT

ಹಾಗಾಗಿ ಗರ್ಭಿಣಿಯರಿಗೆ ಸೇವೆ ಒದಗಿಸುವ ದೃಷ್ಟಿಯಿಂದ ಎಂಸಿಎಚ್ ಆಸ್ಪತ್ರೆಯನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.