ADVERTISEMENT

ಆರ್ಥಿಕ ಸದೃಢತೆಯಿಂದ ಉತ್ತಮ ಜೀವನ ನಿರ್ವಹಣೆ: ಪ್ರೀತಂ ಗೌಡ

ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸೌಲಭ್ಯ ವಿತರಿಸಿದ ಪ್ರೀತಂ ಗೌಡ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 1:53 IST
Last Updated 30 ಜೂನ್ 2022, 1:53 IST
ಹಾಸನದಲ್ಲಿ ಬುಧವಾರ ಶಾಸಕ ಪ್ರೀತಂ ಗೌಡ ಅವರು ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು.
ಹಾಸನದಲ್ಲಿ ಬುಧವಾರ ಶಾಸಕ ಪ್ರೀತಂ ಗೌಡ ಅವರು ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು.   

ಹಾಸನ: ಆರ್ಥಿಕವಾಗಿ ಸದೃಢರಾದಾಗ ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಪ್ರೀತಂ ಜೆ. ಗೌಡ ಸಲಹೆ ನೀಡಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್‌ ಸಭಾಂಗಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ, ಸ್ವ-ಸಹಾಯ ಗುಂಪುಗಳಿಗೆ ಸಾಲ ಮಂಜೂರಾತಿ ಪತ್ರ ಹಾಗೂ ಚೆಕ್ ವಿತರಣೆ ಮತ್ತು ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಪಂಪ್‌ ಮೋಟಾರ್ ಇತರ ಪರಿಕರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಎರಡು ವರ್ಷದಲ್ಲಿ ನೂರಾರು ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿದೆ. ಈ ಹಿಂದೆ ಹಾಸನ ವಿಧಾನಸಭೆ ಕ್ಷೇತ್ರದಲ್ಲಿ ವಾರ್ಷಿಕ ಕೇವಲ 5 ಅಥವಾ 6 ಮಂದಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗುತ್ತಿತ್ತು. ಇದೀಗ ವಿವಿಧ ಯೋಜನೆಗಳಲ್ಲಿ 500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊಳೆವೆಬಾವಿ ಮೋಟಾರ್ ಹಾಗೂ ಮಹಿಳಾ ಸಂಘಗಳಿಗೆ ಧನಸಹಾಯದ ಚೆಕ್ ವಿತರಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಹಾಸನ ವಿಧಾನಸಭೆ ಕ್ಷೇತ್ರದಲ್ಲಿ ಇದುವರೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ 1,200 ಕೊಳವೆ ಬಾವಿಗಳನ್ನು ಮಂಜೂರು ಮಾಡಲಾಗಿದೆ ಎಂದರು.

ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಚೆಕ್ ಡ್ಯಾಂ, ರಸ್ತೆ ಡಾಂಬರೀಕರಣ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುತ್ತಿದೆ. ದಲಿತ, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರೀತಂ ಗೌಡ ಭರವಸೆ ನೀಡಿದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಮನುಕುಮಾರ್, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಶ್ರುತಿ, ಶಂಭುಲಿಂಗಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.