ಆಲೂರು: ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪಟ್ಟಣದ ಮಿನಿ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ, ಶಿಕ್ಷಣ ಇಲಾಖೆ ಹಾಗೂ ರಾಯರಕೊಪ್ಪಲಿನ ಕೆ.ಪಿ.ಎಸ್. ಶಾಲೆ ಸಹಯೋಗದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
‘ಅವಶ್ಯಕ್ಕೆ ತಕ್ಕಂತೆ ಮಾತ್ರ ಮೊಬೈಲ್ ಉಪಯೋಗಿಸಬೇಕು. ದಿನದಲ್ಲಿ ಒಂದು ಗಂಟೆಯಾದರೂ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ಮಾನಸಿಕ ಸಧೃಡತೆ ಬೆಳಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿ ಮಕ್ಕಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಗೆಲ್ಲುವ ಗುರಿ ಹೊಂದಬೇಕು. ಮುಂದಿನ ದಿನಗಳಲ್ಲಿ ಕ್ರೀಡಾಂಗಣಕ್ಕೆ ಮೂಲಸೌಕರ್ಯ ಕಲ್ಪಿಸುವ ಗುರಿ ಇದೆ’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ಮಾತನಾಡಿ, ‘ಯಾವುದೆ ಕ್ರೀಡೆಯಲ್ಲಿ ಸಾಧನೆ ಮಾಡಲು ಗುಣಮಟ್ಟದ ತರಬೇತಿ ಅಗತ್ಯ. ಕ್ರೀಡೆಯಲ್ಲಿ ಸಾಧನೆ ಮಾಡುವವರಿಗೆ ಸದಾ ಪ್ರೋತ್ಸಾಹ ನೀಡುತ್ತೇವೆ. ಕ್ರೀಡೆಗಳಲ್ಲಿನ ನಿರ್ಣಯವನ್ನು ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು’ ಎಂದು ತಿಳಿಸಿದರು.
ಸಮಾರಂಭದಲ್ಲಿ ದೈಹಿಕ ಶಿಕ್ಷಣಾಧಿಕಾರಿಗಳು, ಆಲೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನವೀನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.