ಬೇಲೂರು: ತಾಲ್ಲೂಕಿನ ಬಕ್ರವಳ್ಳಿ ಗ್ರಾಮದ ಸುಬ್ರಹ್ಮಣ್ಯ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಮಂಗನ ಕಳೇಬರ ಪತ್ತೆಯಾಗಿದ್ದು ಇದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಎರಡು ದಿನಗಳ ಹಿಂದೆ ಕಾಫಿ ತೋಟದಲ್ಲಿ ಮಂಗವೊಂದು ಸಾವನ್ನಪ್ಪಿರುವ ವಿಚಾರ ತಿಳಿದ ಅರೋಗ್ಯ ಸಿಬ್ಬಂದಿ ತೋಟದಲ್ಲಿ ಶೋಧ ನಡೆಸಿದ್ದರು. ಶುಕ್ರವಾರ ಕಳೇಬರ ಪತ್ತೆಯಾದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಸುಟ್ಟು ಹಾಕಲಾಯಿತು.
ಈ ವೇಳೆ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ವಿಜಯ್ ‘ಬಕ್ರವಳ್ಳಿ ಗ್ರಾಮದಲ್ಲಿ ಮಂಗವೊಂದು ಮೃತಪಟ್ಟ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಮೃತ ದೇಹದ ಭಾಗಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬೇಲೂರು ತಾಲ್ಲೂಕಿನಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜನರು ಆತಂಕ ಪಡುವ ಅಗತ್ಯವಿಲ್ಲ. ಬಕ್ರವಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಅಗತ್ಯ ಔಷಧಿಗಳನ್ನು ದಾಸ್ತಾನಿನಲ್ಲಿಡಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.