ಹಾಸನ: ಅಂಗವಿಕಲರಿಗೆ ಅನುಕಂಪಕ್ಕಿಂತ ಹೆಚ್ಚು ಅವಕಾಶಗಳು ದೊರೆತರೆ ಸಮಾಜದಲ್ಲಿ ಸರಿ ಸಮಾನರಾಗಿ ಜೀವನ
ನಿರ್ವಹಣೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅಭಿಪ್ರಾಯಪಟ್ಟರು.
ನಗರದ ನಿವೃತ್ತ ನೌಕರರ ಸಂಘದ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಅಂಗವಿಕಲರು ವೈಫಲ್ಯತೆ ಮರೆತು ಸಾಧನೆ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್ ಮಾತನಾಡಿ, ಅಂಗವಿಕಲತೆ ಎನ್ನುವುದು
ದೌರ್ಬಲ್ಯವಲ್ಲ. ಪ್ರತಿಯೊಂದನ್ನೂ ಮಾಡುತ್ತೇನೆ ಎನ್ನುವ ಛಲ ಹಾಗೂ ಆತ್ಮವಿಶ್ವಾಸ ಇರಬೇಕು. ಅಂಗವಿಕಲರ
ಶ್ರೇಯೋಭಿವೃದ್ಧಿಗೆ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಯಾರ ಮೇಲೂ ಅವಲಂಬಿತರಾಗದೆ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ನಿವೃತ್ತ ನೌಕರ ಸಂಘದ ಅಧ್ಯಕ್ಷ ಅನಂತ ರಾಮು ಮಾತನಾಡಿ, ಅಂಗವಿಕಲರೆನ್ನುವುದನ್ನ ಮರೆತು, ಲಭ್ಯವಿರುವ ಸಾಕಷ್ಟು ಅವಕಾಶಗಳನ್ನು ಬಳಸಿಕೊಂಡು ಯಶಸ್ಸು ಸಾಧಿಸಬೇಕು. ಪ್ರಯತ್ನಪಟ್ಟರೆ ಎಲ್ಲವೂ ಸಾಧ್ಯ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪನಿರ್ದೇಶಕ ಕೆ.ಜಿ. ದಿಲೀಪ್, ಅಂಗವಿಕಲರ ಹಾಗೂ ಹಿರಿಯ
ನಾಗರಿಕರ ಸಬಲೀಕರಣ ಅಧಿಕಾರಿ ಎ.ಟಿ. ಮಲ್ಲೇಶ್, ಅಂಗವಿಕಲರ ಸಂಘದ ಅಧ್ಯಕ್ಷ ಸಣ್ಣಸ್ವಾಮಿ, ಅನನ್ಯ ಟ್ರಸ್ಟ್ ಅಧ್ಯಕ್ಷೆ ಕೆ. ಟಿ. ಜಯಶ್ರೀ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.