ADVERTISEMENT

ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬ

ಕೇಂದ್ರ, ರಾಜ್ಯದ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 14:49 IST
Last Updated 10 ಅಕ್ಟೋಬರ್ 2019, 14:49 IST
ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರು ಮೆರವಣಿಗೆ ನಡೆಸಿದರು.   

ಹಾಸನ: ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆಯಿಂದ ನೂರಾರು ಕಾರ್ಯಕರ್ತರು ಮೆರವಣಿಗೆ ಮೂಲಕ ಎನ್.ಆರ್. ವೃತ್ತಕ್ಕೆ ಬಂದು ಮಾನವ ಸರಪಳಿ ರಚಿಸಿ ರಸ್ತೆತಡೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಹಿರಿಯ ಮುಖಂಡ ಬಿ.ವಿ.ಕರೀಗೌಡ ಮಾತನಾಡಿ, ‘ವಾಮ ಮಾರ್ಗದಿಂದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಅಧಿಕಾರ ಹಿಡಿದ ಬಿಜೆಪಿ ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸಲು ವಿಳಂಬ ಮಾಡತ್ತಿದೆ. ಜೆಡಿಎಸ್ ಶಾಸಕರ ಕ್ಷೇತ್ರಗಳ ಅನುದಾನವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೇಂದ್ರದಿಂದ ರಾಜ್ಯಕ್ಕೆ ನೆರೆ ಪರಿಹಾರಕ್ಕೆ ಇದುವರೆಗೆ ಹಣ ಬಿಡುಗಡೆಯಾಗಿಲ್ಲ. ಸಮ್ಮಿಶ್ರ ಸರ್ಕಾರ ನೆರೆ ಪರಿಹಾರಕ್ಕೆ ಕೋರಿದ್ದ ಅನುದಾನ ₹ 1,200 ಕೋಟಿಯನ್ನು ಈಗ ಬಿಡುಗಡೆಯಾಗಿದೆ’ ಎಂದು ಆರೋಪಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್.ಪಿ. ಸ್ವರೂಪ್ ಮಾತನಾಡಿ, ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡುತ್ತದೆ. ಆದರೆ, ನೆರೆ ಹಾನಿಯಿಂದ ತತ್ತರಿಸುತ್ತಿರುವ ಹಾಸನ ಜಿಲ್ಲೆಗೆ ಯಾವುದೇ ಅನುದಾನ ನೀಡಿಲ್ಲ. ಸಕಲೇಶಪುರ ವ್ಯಾಪ್ತಿಯಲ್ಲಿ ಮಳೆಯಿಂದ ನೂರಾರು ಮನೆಗಳು ಹಾನಿಗೊಳಗಾಗಿವೆ. ಇನ್ನು ಅರಸೀಕೆರೆ, ಜಾವಗಲ್, ಕನಕಟ್ಟೆ ಭಾಗದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ದೇವೇಗೌಡ, ಮುಖಂಡರಾದ ಕೆ.ಎಂ. ರಾಜೇಗೌಡ, ಬಿ.ಟಿ. ಸತೀಶ್, ಲಕ್ಷ್ಮಣೇಗೌಡ, ಗೋಪಾಲ್, ಶಿವಮ್ಮ, ರಘು ಹೊಂಗರೆ, ಕಮಲ್‌ ಕುಮಾರ್‌, ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.