ADVERTISEMENT

ಅರಕಲಗೂಡು | ಕುಡಿಯುವ ನೀರು ಪೂರೈಕೆಗೆ ಸೂಚನೆ

ತಾ.ಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಎ.ಮಂಜು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 14:02 IST
Last Updated 5 ಮಾರ್ಚ್ 2024, 14:02 IST
ಅರಕಲಗೂಡಿನಲ್ಲಿ ನಡೆದ ಸಭೆಯಲ್ಲಿ ಶಾಸಕ ಎ.ಮಂಜು ಮಾತನಾಡಿದರು. ಬಸವರೆಡ್ಡಪ್ಪ ರೋಣದ್, ಆಶೋಕ್, ಕುಸುಮಾಧರ್ ಭಾಗವಹಿಸಿದ್ದರು
ಅರಕಲಗೂಡಿನಲ್ಲಿ ನಡೆದ ಸಭೆಯಲ್ಲಿ ಶಾಸಕ ಎ.ಮಂಜು ಮಾತನಾಡಿದರು. ಬಸವರೆಡ್ಡಪ್ಪ ರೋಣದ್, ಆಶೋಕ್, ಕುಸುಮಾಧರ್ ಭಾಗವಹಿಸಿದ್ದರು   

ಅರಕಲಗೂಡು: ‘ತಾಲ್ಲೂಕಿನಲ್ಲಿ ಈ ಬಾರಿ ಬರ ಪರಿಸ್ಥಿತಿ ಇರುವ ಕಾರಣ ಬೇಸಿಗೆಯ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಎ.ಮಂಜು ಸೂಚನೆ ನೀಡಿದರು.

ತಾ.ಪಂ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು ಸಮಸ್ಯೆಗೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ಪಡೆದರು.

‘ಕುಡಿಯುವ ನೀರು ಸರಬರಾಜಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ಕಲ್ಪಿಸಬೇಕು. ಕೆರೆ, ಕಟ್ಟೆಗಳಿಂದ ಪಂಪ್‌ಸೆಟ್ ಬಳಸಿ ನೀರು ಹಾಯಿಸಿಕೊಳ್ಳುತ್ತಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗಂಗನಾಳು ಏತ ನೀರಾವರಿ ಯೋಜನೆ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ಕುಡಿಯುವ ನೀರಿನ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿದ್ದಲ್ಲಿ ಅವುಗಳನ್ನು ಇನ್ನಷ್ಟು ಆಳಕ್ಕೆ ಕೊರೆಸಲು ಯಂತ್ರಗಳ ಸಮಸ್ಯೆ ಎದುರಾಗಿದೆ. ಹಳೆಯ ಬಾವಿಗಳು 6 ಇಂಚು ವ್ಯಾಸ ಹೊಂದಿದ್ದು ಇದೇ ಅಳತೆಯ ಯಂತ್ರ ಅಗತ್ಯವಿದೆ. ಹೊಸ ಯಂತ್ರಗಳಿಂದ ಸಾಧ್ಯವಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.

ಈ ಯಂತ್ರ ಹೊಂದಿರುವ ಗುತ್ತಿಗೆದಾರರಿಗೆ ದೂರವಾಣಿ ಕರೆ ಮಾಡಿದ ಶಾಸಕರು, ಆದ್ಯತೆ ಮೇರೆಗೆ ಗ್ರಾಪಂ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ತಾಲ್ಲೂಕಿನ 33 ಗ್ರಾ.ಪಂ.ಗಳ 80 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ತಾತ್ಕಾಲಿಕ ಕ್ರಮಗಳ ಮೂಲಕ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ತಾಲ್ಲೂಕು ಮಟ್ಟದ ಹಾಗೂ ಗ್ರಾಪಂ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಹೆಚ್ಚಿನ ನಿಗಾವಹಿಸಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕರು ತಿಳಿಸಿದರು.

ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ್, ತಾ.ಪಂ ಇಒ ಡಾ.ಆಶೋಕ್, ಹೊಳೆನರಸೀಪುರ ತಾ.ಪಂ ಇಒ ಕುಸುಮಾಧರ್ ಇದ್ದರು.

ಅರಕಲಗೂಡಿನಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.