ಹಾಸನ:ತಾಲ್ಲೂಕಿನ ಕಟ್ಟಾಯ ಗ್ರಾಮದ ಖಾಸಗಿ ಭೂ ಮಾಪಕ ಮೃತಪಟ್ಟಿದ್ದು, ಇದಕ್ಕೆ ನಗರದ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿದರು.
ನಗರದ ಜನಪ್ರಿಯ ಆಸ್ಪತ್ರೆಯಲ್ಲಿ ಕೆ.ಎನ್. ಧರ್ಮ (50) ಮಂಗಳವಾರ ಮೃತಪಟ್ಟರು. ಅನಾರೋಗ್ಯದಿಂದ ಕುಸಿದು ಬಿದ್ದ ಅವರನ್ನು ನಗರದ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತಸ್ರಾವ ಉಂಟಾದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಮಂಗಳವಾರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಬುಧವಾರ ಧರ್ಮ ಅವರ ಸ್ವಗ್ರಾಮ ಕಟ್ಟಾಯದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಧರ್ಮ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬದ ಸದಸ್ಯರು ಖಾಸಗಿ ಆಸ್ಪತ್ರೆ ಎದುರು ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದರು.
ನಾವು ಬೇಡವೆಂದರೂ ಬಲವಂತವಾಗಿ ಆಪರೇಷನ್ ಮಾಡಿದರು. ನಂತರ ಉತ್ತಮ ಆರೈಕೆ ನೀಡಲಿಲ್ಲ. ಮಿದುಳು ನಿಷ್ಕ್ರಿಯಗೊಂಡ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವಂತೆ ಶಿಫಾರಸು ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಸ್ಪತ್ರೆ ಆವರಣದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಬಡಾವಣೆ ಠಾಣೆ ಪೊಲೀಸರು ಭದ್ರತೆ ಒದಗಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.