ಹೊಳೆನರಸೀಪುರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ನವರು ಅಬ್ಬರ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಮತದಾರರ ಭಾವನೆ ಬೇರೆ ಇದೆ. ಡಾ.ಸಿ.ಎನ್. ಮಂಜುನಾಥ ಅವರನ್ನು ಗೆಲ್ಲಿಸಲು ಅಲ್ಲಿನ ಜನ ನಿರ್ಧರಿಸಿದ್ದಾರೆ. ಅದಕ್ಕಾಗಿಯೇ ಡಿ.ಕೆ. ಶಿವಕುಮಾರ್ ಹಾಗೂ ಸುರೇಶ್ ಅವರು ಸಿ.ಎನ್. ಮಂಜುನಾಥ ಎನ್ನುವ ಹೆಸರಿನವರನ್ನು ಕರೆತಂದು ಚುನಾವಣೆಗೆ ನಿಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಕುಮಾರಸ್ವಾಮಿ ನೀಡಿರುವ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದಾರೆ. ಪಾಪ ಕಾಂಗ್ರೆಸ್ನವರು ಹತಾಶರಾಗಿದ್ದಾರೆ. ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ, ಅವರ ರಾಜಕೀಯ ಮುಗಿದೇ ಹೋಯಿತು. ಇನ್ನೇನಿದ್ದರೂ ನಾನೆ ಎನ್ನುವ ಭ್ರಮೆಯಲ್ಲಿ ಇದ್ದರು. ಕುಮಾರಸ್ವಾಮಿ ಮಂಡ್ಯದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಗೆಲುವು ಸಾಧಿಸಿ ಕೇಂದ್ರದಲ್ಲಿ ಸಚಿವರಾಗಲಿದ್ದಾರೆ. ನಂತರ ನಮ್ಮ ಅಸ್ತಿತ್ವ ಇರುವುದಿಲ್ಲ ಎಂಬ ಭಯ ಕಾಂಗ್ರೆಸ್ಸಿಗರಿಗೆ ಕಾಡುತ್ತಿದೆ ಎಂದು ತಿರುಗೇಟು ನೀಡಿದರು.
ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಗೆ ಏನು ಮಾಡಿದ್ದಾರೆ ಎಂಬುದನ್ನು ಕ್ಷೇತ್ರದ ಜನರು ಗಮನಿಸಿದ್ದಾರೆ. ಬಿ.ವೈ. ರಾಘವೇಂದ್ರ ಸಂಸದರಾಗಿ ಅಭಿವೃದ್ದಿ ಮಾಡಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಆಗಿರುವ ಕೆಲಸವನ್ನೂ ಜಿಲ್ಲೆಯ ಜನರು ನೋಡಿದ್ದಾರೆ. ಬಿ.ವೈ. ರಾಘವೇಂದ್ರ ಅವರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಶ್ವರಪ್ಪ ಅವರು ಮಾತನಾಡಿದಷ್ಟು ಹೆಚ್ಚು ಮತಗಳು ರಾಘವೇಂದ್ರ ಅವರಿಗೆ ಬರಲಿವೆ. ಈಶ್ವರಪ್ಪ ಅವರ ಬಗ್ಗೆ ಬಿಜೆಪಿ ವರಿಷ್ಠರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಏನೇ ವೈಮನಸ್ಸು ಇದ್ದರೂ, ದಿಂಗಾಲೇಶ್ವರ ಶ್ರೀಗಳು ಚರ್ಚೆ ನಡೆಸಿ ಪರಿಹರಿಸಿಕೊಳ್ಳಬೇಕು. ಇಂತಹ ಸಂದರ್ಭದಲ್ಲಿ ನಮ್ಮ ಜೊತೆಗೆ ಕೈಜೋಡಿಸಿ ಎಂದು ಶ್ರೀಗಳಿಗೆ ಮನವಿ ಮಾಡುತ್ತೇನೆ. ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಬೇಕಿದೆ. ಅದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂಬುದು ನಮ್ಮ ಮನವಿ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.