ಹಾಸನ: ಟೆಲಿಫೋನ್ ಕದ್ದಾಲಿಕೆಯಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಮೊದಲು ಎಫ್ಐಆರ್ ದಾಖಲಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಎ.ಮಂಜು ಆಗ್ರಹಿಸಿದರು.
‘300 ಜನರ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆಯೆಂದು ಡಿಜಿಪಿ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಚಿತ್ರ ನಟಿ ಸುಮಲತಾ ಹಾಗೂ ನನ್ನ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆ. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಅದಕ್ಕೂ ಮುನ್ನ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಾಗೂ ಅವರ ಜತೆ ಕೈ ಜೋಡಿಸಿರುವ ಅಧಿಕಾರಿಗಳ ಮೇಲೂ ಎಫ್ಐಆರ್ ದಾಖಲಿಸಿ, ನಂತರ ಸಿಬಿಐ ತನಿಖೆ ನಡೆಸಬೇಕು. ಇಲ್ಲವಾದರೆ ಅಧಿಕಾರಿಗಳು ತಪ್ಪಿಸಿಕೊಳ್ಳುವ ಸಾಧ್ಯತೆ ಹೆಚ್ಚು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಕಲಂ 21ರ ಪ್ರಕಾರ ಪತ್ನಿಯ ಕರೆಯನ್ನೂ ಕದ್ದಾಲಿಕೆ ಮಾಡುವಂತಿಲ್ಲ. ಆದರೆ, ಸಿ.ಎಂ. ಸೂಚನೆ ಮೇರೆಗೆ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಆಗಬೇಕು. ರಾಮಕೃಷ್ಣ ಹೆಗೆಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ಎಚ್.ಡಿ.ದೇವೇಗೌಡರು ಫೋನ್ ಕದ್ದಾಲಿಕೆ ವಿಚಾರ ಇಟ್ಟುಕೊಂಡು ಹೋರಾಟ ಮಾಡಿದರು. ಈಗ ಗೌಡರ ಮಗನೇ ಇದರಲ್ಲಿ ಭಾಗಿಯಾಗಿದ್ದಾರೆ’ ಎಂದು ವ್ಯಂಗ್ಯವಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.