ಹಾಸನ: ನಗರದಲ್ಲಿ ಸಂಚಾರ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಮೂಲಾಗ್ರ ಬದಲಾವಣೆ ಮಾಡಲಾಗುತ್ತಿದೆ. ಟ್ರಾಫಿಕ್ ಸಿಗ್ನಲ್ ಅಳವಡಿಕೆ ಹಾಗೂ ಸಂಚಾರಿ ನಿಯಮ ಉಲ್ಲಂಘನೆಗೆ ಕಾಂಟ್ಯಾಕ್ಟ್ ಲೆಸ್ ಟ್ರಾಫಿಕ್ ಚಲನ್ ವಿತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರ ನಿಯಮ ಜಾರಿ ಉಲ್ಲಂಘನೆ ನಿಯಂತ್ರಿಸಲು ಈಗಾಗಲೇ ಜಿಲ್ಲೆಯ ಕೇಂದ್ರ ಸ್ಥಳ ಸೇರಿದಂತೆ ಪ್ರತಿ ತಾಲ್ಲೂಕಿನಲ್ಲಿ ವಾರದಲ್ಲಿ ಒಂದು ದಿನ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಸಂಚಾರಿ ನಿಯಮ ಉಲ್ಲಂಘಿಸಿದರೆ ಕಾಂಟಾಕ್ಟ್ ಲೆಸ್ ಚಲನ್ ನೀಡುವ ಹೊಸ ನಿಯಮವನ್ನು ಜಾರಿ ಮಾಡಲಾಗುತ್ತಿದ್ದು, ಇದರಿಂದ ಗ್ರಹಕರಿಗೆ ಪಾರದರ್ಶಕ ಬಿಲ್ಲಿಂಗ್ ವ್ಯವಸ್ಥೆ ಜಾರಿ ಮಾಡಿದಂತಾಗಲಿದೆ ಎಂದರು.
ನಗರದ ಪಾಯಣ್ಣ ಸರ್ಕಲ್, ಸುಬೇದಾರ್ ಸರ್ಕಲ್ ಮತ್ತು ಅರಸೀಕೆರೆ, ಚನ್ನರಾಯಪಟ್ಟಣ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸಭೆಗೆ ನಿರ್ಧಾರ: ನಗರದಲ್ಲಿ ಬೇಕಾಬಿಟ್ಟಿಯಾಗಿ ಆಟೋ ಬಾಡಿಗೆ ವಸೂಲಿ ಮಾಡುತ್ತಿರುವ ದೂರು ವ್ಯಾಪಕವಾಗಿ ಕೇಳಿಬಂದಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ನಿಟ್ಟಿನಲ್ಲಿ ನಗರದ ನೂತನ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ ಸಮೀಪ ಪ್ರಿಪೇಯ್ಡ್ ಆಟೋ ನಿಲ್ದಾಣವನ್ನು ತೆರೆಯುವ ಕುರಿತು ಸಾರ್ವಜನಿಕರು, ಆಟೋ ಮಾಲೀಕರು ಹಾಗೂ ಚಾಲಕರ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹರಿರಾಂ ಶಂಕರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.