ಹಾಸನ: ರೈತ ಹಾಗೂ ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಗಳನ್ನು ಕಾನೂನು ಮಾಡದಂತೆ ಒತ್ತಾಯಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಬುಧವಾರ ಶಾಸಕ ಪ್ರೀತಂ ಗೌಡ ಕಚೇರಿ ಎದುರು ಪ್ರತಿಭಟನೆ ನೆಡೆಸಲಾಯಿತು.
ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದು ರೈತರಿಗೆ ಆಘಾತಕಾರಿ. ಕಾರ್ಮಿಕ ಕಾಯ್ದೆಗಳಿಗೂ ತಿದ್ದುಪಡಿ ತರಲಾಗಿದೆ. ಇವೆಲ್ಲವೂ ರಾಜ್ಯದ ರೈತರು ಹಾಗೂ ಕಾರ್ಮಿಕರ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತವೆ. ರೈತ, ಕಾರ್ಮಿಕ, ಪರಿಶಿಷ್ಟ ಜಾತಿ ಮತ್ತು ಪಂಗಡ, ಅಲ್ಪಸಂಖ್ಯಾತ, ಮಹಿಳೆ ಹೀಗೆ ವಿವಿಧ ಸಾಮಾಜಿಕ ಜನ ಸಮೂಹಗಳನ್ನು ಮತ್ತಷ್ಟು ಸಂಕಷ್ಟಕ್ಕೆ ಈಡು ಮಾಡಲಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೋವಿಡ್ ಸಂಕಷ್ಟವನ್ನು ದುರ್ಬಳಕೆ ಮಾಡಿಕೊಂಡಿರುವ ಸರ್ಕಾರ ರೈತ ವಿರೋಧಿಯಾದ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದೆ. ಈಗ ಇವುಗಳ ಅಂಗೀಕಾರಕ್ಕಾಗಿ ವಿಧಾನಸಭೆಯ ಅಧಿವೇಶನ ಕರೆದಿದೆ. ಸರ್ಕಾರ ತನ್ನ ಪ್ರಯತ್ನದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರವನ್ನು ಕಾರ್ಪೋರೆಟ್ ಕಂಪನಿಗಳ ಸುಪರ್ದಿಗೆ ಒಪ್ಪಿಸುವ ಉದ್ದೇಶ ಹೊಂದಿದೆ. ಅದಕ್ಕಾಗಿ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ, ಪ್ರಜಾಪ್ರಭುತ್ವ ಆಶಯಗಳ ವಿರುದ್ಧವಾಗಿ ಸುಗ್ರಿವಾಜ್ಞೆಗಳ ಮೂಲಕ ಕಾಯ್ದೆಗಳ ತಿದ್ದುಪಡಿಗೆ ಮುಂದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಸುಮ, ಕೆಪಿಆರ್ಎಸ್ ಜಿಲ್ಲಾಧ್ಯಕ್ಷ ಎಚ್.ಆರ್. ನವೀನ್ಕುಮಾರ್, ಎಐಕೆಎಸ್ ಜಿಲ್ಲಾಧ್ಯಕ್ಷ ಎಂ.ಸಿ. ಡೋಂಗ್ರೆ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ವಸಂತ್ ಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.