ADVERTISEMENT

ರೈತರಿಗಾಗಿ ಜೈಲಿಗೆ ಹೋಗಲು ಸಿದ್ಧ: ವಾಟಾಳ್‌ ನಾಗರಾಜ್‌

ಕಾಯ್ದೆ ವಾಸ್‌ ಪಡೆಯದಿದ್ದರೆ ರಾಜೀನಾಮೆ ನೀಡಿ; ವಾಟಾಳ್‌ ನಾಗರಾಜ್‌

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 12:47 IST
Last Updated 27 ಸೆಪ್ಟೆಂಬರ್ 2020, 12:47 IST
ಹಾಸನದ ಎನ್‌.ಆರ್‌. ವೃತ್ತದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು.
ಹಾಸನದ ಎನ್‌.ಆರ್‌. ವೃತ್ತದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು.   

ಹಾಸನ: ‘ವಿವಿಧ ಸಂಘಟನೆಗಳು ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್‌ ಅನ್ನು ಯಾರಿಂದಲೂಹತ್ತಿಕ್ಕಲು ಸಾಧ್ಯವಿಲ್ಲ. ರೈತರಿಗಾಗಿ ಜೈಲಿಗೆ ಹೋಗಲೂ ಸಿದ್ಧ’ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ ಎಚ್ಚರಿಕೆ ನೀಡಿದರು.

ಕರ್ನಾಟಕ ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ಎನ್‌.ಆರ್‌ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಯಾವುದೇ ಚರ್ಚೆ ಮಾಡದೆ ರೈತ, ಕಾರ್ಮಿಕ ವಿರೋಧಿ ಮಸೂದೆ ಜಾರಿಗೆ ತಂದು ರೈತರ ಮರಣ ಶಾಸನ ಬರೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮಂತ್ರಿ ಮಂಡಲ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಒತ್ತಾಯಿಸಿದರು.

ADVERTISEMENT

‘ಹಣ ಇರುವ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಬಹುದು ಎಂಬ ಕಾಯ್ದೆ ಸಾಕಷ್ಟು ಸಂಕಷ್ಟತಂದೊಡ್ಡುತ್ತದೆ. ರೈತರು ಭೂಮಿ ಮೇಲಿನ ಹಕ್ಕನ್ನು ಕಳೆದುಕೊಳ್ಳಲು ಯಾವ ಕಾರಣಕ್ಕೂ ಒಪ್ಪುವುದಿಲ್ಲ. ಯಡಿಯೂರಪ್ಪ ಅವರು ಬಂಡವಾಳಶಾಹಿಗಳ ಲಾಬಿಗೆ ಮಣಿಯುತ್ತಿದ್ದು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ಯಾವುದೇ ಅರ್ಹತೆ ಇಲ್ಲ’ ಎಂದು ಕಿಡಿಕಾರಿದರು.

‘40ಕ್ಕೂ ಹೆಚ್ಚು ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಹತ್ತಿಕ್ಕಲು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರು ಕಮಿಷನರ್, ಡಿಜಿ, ಬಿಬಿಎಂಪಿ ಆಡಳಿತಾಧಿಕಾರಿ ಸೇರಿದಂತೆ ಮುಖ್ಯ ಹುದ್ದೆಗಳಲ್ಲಿರುವ ಯಾರೂ ಕನ್ನಡಿಗರಲ್ಲ. ಎಲ್ಲ ಕಡೆ ಪರ ಭಾಷಿಕರನ್ನೇ ನೇಮಿಸಲಾಗಿದೆ. ಈ ಹಿಂದೆ ತಿರುವಳ್ಳುವರ್ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪ್ರತಿಭಟನೆ ನಡೆಸಿದಾಗ ನನ್ನನ್ನು ಸೇರಿದಂತೆ ಅನೇಕ ಹೋರಾಟಗಾರರನ್ನು ನಾಲ್ಕು ದಿನ ಹಾಸನದ ಜೈಲಿಗೆ ಹಾಕಲಾಗಿತ್ತು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

’ಸೆ. 28ರ ಕರ್ನಾಟಕ ಬಂದ್‌ಗೆ ಹೋಟೆಲ್ ಮಾಲೀಕರ ಸಂಘಟನೆ ಬೆಂಬಲ ನೀಡುವುದಿಲ್ಲ ಎಂದು ಹೇಳಿದೆ. ಆದ್ದರಿಂದ ರಾಜ್ಯದ ಎಲ್ಲಾ ರೈತರು ಹಾಗೂ ಕನ್ನಡಪರ ಹೋರಾಟಗಾರರು ಹೋಟೆಲ್‍ಗೆ ಹೋಗಿ ಮಸಾಲೆ ದೋಸೆ, ಇಡ್ಲಿ ವಡೆ, ಖಾರಾ ಬಾತ್ ಎಲ್ಲವನ್ನೂ ತಿಂದು ಯಾವ ಕಾರಣಕ್ಕೂ ಹಣ ಕೊಡದೆ ಬರಬೇಕು. ಆ ಮೂಲಕ ಹೋಟೆಲ್ ಮಾಲೀಕರ ವಿರುದ್ಧ ಪ್ರತಿಭಟನೆ ಮಾಡಬೇಕು’ ಎಂದು ಕರೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಶ್‌ ಶೇಟ್ಟಿ ಬಣ) ಸತೀಶ್ ಪಟೇಲ್, ರಘು ಗೌಡ ಹಾಗೂ ಇತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.