ADVERTISEMENT

ಅರಸೀಕೆರೆ: ಜೀತ ವಿಮುಕ್ತರಿಗೆ ಪುನರ್ವಸತಿ ಕಲ್ಪಿಸಲು ಕ್ರಮ

ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ; ಕಾರ್ಮಿಕರ ಯೋಗಕ್ಷೇಮ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 3:41 IST
Last Updated 9 ಏಪ್ರಿಲ್ 2022, 3:41 IST
ಅರಸೀಕೆರೆ ನಗರದ ಜೇನುಕಲ್ಲು ಬಡಾವಣೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಪಡೆದಿರುವ ಜೀತ ವಿಮುಕ್ತ ಕಾರ್ಮಿಕರ ಯೋಗಕ್ಷೇಮವನ್ನು ಶಾಸಕ ಕೆ.ಎಂ. ಶಿವಲಿಂಗೇಗೌಡ ವಿಚಾರಿಸಿದರು. ವಿಭಾ ವಿದ್ಯಾ ರಾಥೋಡ್, ಗೋಪಾಲಪ್ಪ, ಪಾಲಾಕ್ಷಮೂರ್ತಿ, ಮಂಜುನಾಥ್ ಇದ್ದರು
ಅರಸೀಕೆರೆ ನಗರದ ಜೇನುಕಲ್ಲು ಬಡಾವಣೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಪಡೆದಿರುವ ಜೀತ ವಿಮುಕ್ತ ಕಾರ್ಮಿಕರ ಯೋಗಕ್ಷೇಮವನ್ನು ಶಾಸಕ ಕೆ.ಎಂ. ಶಿವಲಿಂಗೇಗೌಡ ವಿಚಾರಿಸಿದರು. ವಿಭಾ ವಿದ್ಯಾ ರಾಥೋಡ್, ಗೋಪಾಲಪ್ಪ, ಪಾಲಾಕ್ಷಮೂರ್ತಿ, ಮಂಜುನಾಥ್ ಇದ್ದರು   

ಅರಸೀಕೆರೆ: ‘ಜೀತ ವಿಮುಕ್ತರಾಗಿರುವ 55 ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ಕಾರ್ಮಿಕ ಸಚಿವರೊಂದಿಗೆ ಚರ್ಚಿಸುತ್ತೇನೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ ನೀಡಿದರು.

ನಗರದ ಜೇನುಕಲ್ಲು ಬಡಾವಣೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿದ ಶಾಸಕರು, ಇಲ್ಲಿ ಆಶ್ರಯ ಪಡೆದಿರುವ ಜೀತ ವಿಮುಕ್ತ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು.

‘ಜೀತ ವಿಮುಕ್ತ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಇನ್ನು ಮುಂದೆ ತಾಲ್ಲೂಕಿನಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು’ ಎಂದು ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಸೂಚಿಸಿದರು.

ADVERTISEMENT

‘55 ಕಾರ್ಮಿಕರೂ ಮುಗ್ಧರಿದ್ದಾರೆ. ಯಾವುದೋ ಚಟಕ್ಕೆ ಬಲಿಯಾಗಿರುವ ಇವರನ್ನು ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಘಟನೆಯ ಪ್ರಮುಖ ಆರೋಪಿಯನ್ನು ಬಂಧಿಸಬೇಕು. ಜೀತ ವಿಮುಕ್ತಿಗೊಂಡ ಕಾರ್ಮಿಕರು ತಮ್ಮ ಊರುಗಳಿಗೆ ಸುರಕ್ಷಿತವಾಗಿ ತಲುಪಲು ಅಗತ್ಯ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ‘ಆಧುನಿಕ ಯುಗದಲ್ಲಿ ಇಂಥ ಘಟನೆಗಳು ನಡೆದಿರುವುದು ಸೋಜಿಗ. ಅವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಬಟ್ಟೆ, ಊಟ, ವಸತಿ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯ ಗಳನ್ನು ಒದಗಿಸಲಾಗಿದೆ. ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ’ ಎಂದು ತಿಳಿಸಿದರು.

ಗ್ರೇಡ್ 2 ತಹಶೀಲ್ದಾರ್ ಪಾಲಾಕ್ಷಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ, ರಾಜಸ್ವ ನಿರೀಕ್ಷಕ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.