ಹಾಸನ: ‘ವರ್ಷಕ್ಕೊಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಅಧಿದೇವತೆ ಹಾಸನಾಂಬಾ ದರ್ಶನಕ್ಕೆ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಈ ಬಾರಿ ಅ. 28 ರಿಂದ ನ. 6ರ ವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದ್ದು, ದರ್ಶನಕ್ಕೆ ಕೇವಲ ಗಣ್ಯರು ಮತ್ತು ಜನಪ್ರತಿನಿಧಿಗಳಿಗೆ ಮಾತ್ರ ಅವಕಾಶ ನೀಡಿರುವುದು ಸರಿಯಲ್ಲ. ನಾನಾ ಬೇಡಿಕೆಯನ್ನಿಟ್ಟುಕೊಂಡು ಲಕ್ಷಾಂತರ ಭಕ್ತರು ಹರಕೆ ಹೊತ್ತಿರುತ್ತಾರೆ. ಆದರೆ, ಜಿಲ್ಲಾಡಳಿತ ಕೋವಿಡ್ ಕಾರಣ ಮುಂದಿಟ್ಟು ಕೆಲವರಿಗೆ ಮಾತ್ರ ದೇವಿ ದರ್ಶನ ನೀಡಿರುವುದು ಎಷ್ಟು ಸರಿ ಎಂದು ಪ್ರತಿಭಟನಕಾರರು ಪ್ರಶ್ನಿಸಿದರು.
ಕೋವಿಡ್ ನಿಯಮ ಪಾಲಿಸಿಯೇ ಭಕ್ತರಿಗೂ ದೇವಿ ದರ್ಶನಕ್ಕೆ ಅವಕಾಶ ನೀಡಬೇಕು. ಇಲ್ಲವಾದರೆ ಯಾರಿಗೂ ಪ್ರವೇಶ ನಿಡಬಾರದು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದೊಡ್ಪುರ ರವಿ, ಲೋಕೇಶ್, ರವಿಕುಮಾರ್, ಹೇಮಂತ್ ಗೌಡ, ಪ್ರವೀಣ್, ಮಲ್ಲೇಶ್,
ಪಾರ್ವತಿ, ಬಾಲಶಂಕರ್, ಕುಮಾರ್, ದಿನೇಶ್, ಗಿರೀಶ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.