ಹಾಸನ: ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ
ಕರ್ನಾಟಕ ಪ್ರದೇಶ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ
ನಡೆಸಲಾಯಿತು.
ರೈತ ಕಷ್ಟಪಟ್ಟು ಬೆಳೆ ಬೆಳೆದರೂ ಸರಿಯದ ಬೆಲೆ ಸಿಗುತ್ತಿಲ್ಲ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಎಲ್ಲಾ
ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ, ರೈತ ಮಾತ್ರ ಮತ್ತಷ್ಟು ನಷ್ಟಕ್ಕೆ ಒಳಗಾಗುತ್ತಿರುವುದರಿಂದ
ಆತ್ಮಹತ್ಯೆಗಳು ಹೆಚ್ಚು ನಡೆಯುತ್ತಿವೆ. ಸರ್ಕಾರ ಘೋಷಣೆ ಮಾಡುವ ಯಾವುದೇ ಸಬ್ಸಿಡಿಗಳು, ಯೋಜನೆಗಳು
ಸರಿಯಾಗಿ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ದೇಶದಲ್ಲಿ ಶೇಕಡಾ 70 ರಷ್ಟು ಕೃಷಿಕರಿದ್ದರೂ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ
ಮುಂದುವರೆದರೆ ಕೃಷಿ ಕ್ಷೇತ್ರ ಅವನತಿ ಹೊಂದಿ ಆಹಾರದ ಅಭಾವ ಉಂಟಾಗುವ ಸಾಧ್ಯತೆ ಇದೆ. ಈ ವ್ಯವಸ್ಥೆ
ಸರಿಯಾಗಬೇಕಾದರೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ) ಬದಲು ವೈಜ್ಞಾನಿಕ ಬೆಲೆ
ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಾಳೇಗೌಡ, ಪ್ರಾಂತ ಸಂಘಟನಾ
ಕಾರ್ಯದರ್ಶಿ ಕೆ.ಎನ್. ನಾರಾಯಣಸ್ವಾಮಿ, ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಬಿ. ಮಲ್ಲಪ್ಪ,
ಮುಖಂಡರಾದ ರಾಜು, ಕುಮಾರಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.