ADVERTISEMENT

ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

ಮದ್ಯ ನಿಷೇಧ ಆಂದೋಲನ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 2:06 IST
Last Updated 3 ಫೆಬ್ರುವರಿ 2021, 2:06 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮದ್ಯ ನಿಷೇಧ ಆಂದೋಲನ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮನವಿ ಸಲ್ಲಿಸಲಾಯಿತು
ಹಾಸನ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮದ್ಯ ನಿಷೇಧ ಆಂದೋಲನ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮನವಿ ಸಲ್ಲಿಸಲಾಯಿತು   

ಹಾಸನ: ‘ಸುಪ್ರೀಂ ಕೋರ್ಟ್ ಆದೇಶದಂತೆ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣ ನಿಲ್ಲಿಸಬೇಕು’ ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಆಗಬೇಕೆಂದು ಮಹಿಳೆಯರು ಕಳೆದ 6 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದಾರೆ. ರಾಜ್ಯದ ಹಳ್ಳಿ ಹಳ್ಳಿಗಳ ಕೆಲವು ಚಿಲ್ಲರೆ ಅಂಗಡಿಗಳು ಮತ್ತು ಕೆಲವು ಹೋಟೆಲ್‌ಗಳಲ್ಲಿ ಎಗ್ಗಿಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಪ್ರತಿಭಟನಕಾರರು ಮನವಿ ಪತ್ರದಲ್ಲಿ ಆರೋಪಿಸಿದರು.

ಮದ್ಯ ಸೇವನೆಯಿಂದ ಅನೇಕರ ಬದುಕು ಬೀದಿಗೆ ಬಂದಿದೆ. ಅದು ಪರವಾನಗಿ ಇಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಪೆಟ್ಟಿಗೆ ಅಂಗಡಿಗಳಲ್ಲಿ ಸುಲಭವಾಗಿ ಮದ್ಯ ಸಿಗುತ್ತಿದೆ. ಇದರಿಂದ ಯುವ ಸಮುದಾಯವು ಮದ್ಯ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಇದೆ. ಕುಡಿದ ಅಮಲಿನಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದು, ಇತ್ತೀಚೆಗೆ ಅಪರಾಧಗಳ ಸಂಖ್ಯೆಯೂ ಏರಿಕೆಯಾಗಿದೆ ಎಂದು ದೂರಿದರು.

ADVERTISEMENT

ಮಹಿಳೆಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಸೆಳೆದಿದ್ದರು. ಅಧಿಕಾರಿಗಳ ಜಾಣ ಕುರುಡು ಪ್ರದರ್ಶಿಸುತ್ತಾ ಬರುತ್ತಿದ್ದಾರೆ. ಇದೀಗ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ನಂತರ. ತಕ್ಷಣವೇ ಅಕ್ರಮವಾಗಿ ಮದ್ಯ ಮಾರಾಟ ನಿಲ್ಲಿಸಲು ಕ್ರಮಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ ಎಂದರು.

‘ನ್ಯಾಯಾಲಯದ ಆದೇಶದಂತೆ ಕೂಡಲೇ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು. ಸರ್ಕಾರ ಈ ಆದೇಶವನ್ನು 15 ದಿನಗಳೊಳಗಾಗಿ ಕಾರ್ಯರೂಪಕ್ಕೆ ತರದಿದ್ದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡುವುದಾಗಿ’ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜನಸಂಗ್ರಾಮಪರಿಷತ್ ಜಿಲ್ಲಾ ಸಂಚಾಲಕ ಅಹಮದ್ ಅಲಿಖಾನ್, ಸಾಮಾಜಿಕ ಕಾರ್ಯಕರ್ತ ಸಮೀರ್ ಅಹಮದ್, ನವ ಕರ್ನಾಟಕ ಯುವಶಕ್ತಿ ರಾಜ್ಯ ಉಪಾಧ್ಯಕ್ಷ ಡಿ. ಶಂಕರೇಗೌಡ, ನಗರಾಧ್ಯಕ್ಷ ರಘು ನಂದನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ವಿ. ಗಿರೀಶ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.